ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೊಧನಾ ಸಂಸ್ಥೆಯ (ಕೆಎಂಸಿಆರ್ಐ) ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ರೋಗಿ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.
ನೇಕಾರ ನಗರದ ಆದರ್ಶ ಗೋಂದಕರ್ (18) ಆತ್ಯಹತ್ಯೆ ಮಾಡಿಕೊಂಡವರು.
ಆದರ್ಶ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ರಕ್ತದ ಪ್ಲೇಟ್ಲೆಟ್ ಸಂಖ್ಯೆ ಸಹ ಕಡಿಮೆಯಾಗಿತ್ತು. ಅವರು ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಕೆಎಂಸಿಆರ್ಐ ನಿರ್ದೇಶಕ ಡಾ.ಎಸ್.ಎಫ್.ಕಮ್ಮಾರ ತಿಳಿಸಿದರು.
ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಬೆಳಿಗ್ಗೆ 4.30ಕ್ಕೆ ವಾರ್ಡ್ನಲ್ಲಿನ ಸಿಬ್ಬಂದಿಯ ಕಣ್ತಪ್ಪಿಸಿ ಅವರು ಆಸ್ಪತ್ರೆಯ ಮುಖ್ಯ ಕಟ್ಟಡದ 303ನೇ ವಾರ್ಡ್ನ ಕಿಟಕಿಯಿಂದ ಜಿಗಿದಿದ್ದಾರೆ. ಅವರ ತಲೆ ಮತ್ತು ಯಕೃತ್ತಿಗೆ ಹಾನಿಯಾಗಿತ್ತು. ಕೂಡಲೇ ಚಿಕಿತ್ಸೆ ನೀಡಿದರೂ ಸ್ಪಂದಿಸಲಿಲ್ಲ ಎಂದರು.
ಮರಣೋತ್ತರ ಪರೀಕ್ಷೆ ನಂತರ ವರದಿ ನೀಡುವಂತೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ಸೂಚಿಸಲಾಗಿದೆ.
ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಡಾ.ರಾಜಶೇಖರ ದ್ಯಾಬೇರಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ ಎಂದು ತಿಳಿಸಿದರು.
ವಿದ್ಯಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.