ಧಾರವಾಡ: ರಾಜ್ಯದ ಕೆಲ ಮಹಾನಗರ ಪಾಲಿಕೆ ಮತ್ತು ನಗರ ಸಭೆಯ ವಿವಿಧ ವಾರ್ಡ್ಗಳ ಮರುವಿಂಗಡಣೆ ಮತ್ತು ಮೀಸಲಾತಿ ಅಧಿಸೂಚನೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ರಿಟ್ ಅರ್ಜಿ ವಿಚಾರಣೆಯನ್ನು ನ್ಯಾಯಪೀಠವು ಎರಡು ವಾರಗಳ ಕಾಲ ಮುಂದೂಡಿದೆ.
ಬೆಳಗಾವಿ, ಬಳ್ಳಾರಿ, ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆ ಮತ್ತು ಗದಗ– ಬೆಟಗೇರಿ ನಗರಸಭೆಯ ವಿವಿಧ ವಾರ್ಡ್ಗಳಮರು ವಿಂಗಡಣೆ ಮತ್ತು ಮೀಸಲಾತಿ ಅಧಿಸೂಚನೆ ಪ್ರಶ್ನಿಸಿ ರಿಟ್ ಅರ್ಜಿಗಳು ಸಲ್ಲಿಕೆಯಾಗಿದ್ದವು. ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಜಿ.ಪಂಡಿತ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.
ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಾದ ಮಂಡಿಸಲಿದ್ದು, ಅನಿವಾರ್ಯ ಕಾರಣಗಳಿಂದ ಶುಕ್ರವಾರ ನ್ಯಾಯಪೀಠದ ಮುಂದೆ ಹಾಜರಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಸರ್ಕಾರಿ ವಕೀಲರ ಮನವಿಯ ಹಿನ್ನೆಲೆ ವಿಚಾರಣೆಯನ್ನು ನ್ಯಾಯಪೀಠ ಮುಂದೂಡಿತು.
ಬೆಳಗಾವಿ, ಹುಬ್ಬಳ್ಳಿ- ಧಾರವಾಡ, ಬಳ್ಳಾರಿ ಮಹಾನಗರ ಪಾಲಿಕೆಯ ವಿವಿಧ ವಾರ್ಡ್ಗಳ ಮರು ವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಆ. 8ರಂದು ಅಧಿಸೂಚನೆ ಹೊರಡಿಸಿತ್ತು. ಗದಗ- ಬೆಟಗೇರಿ ನಗರಸಭೆಗೆ ಜುಲೈ 30 ರಂದು ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಬೆಳಗಾವಿಯ ಬೈರಗೌಡ ಪಾಟೀಲ, ಧಾರವಾಡದ ಸಂಜಯ ಕಪಟಕರ, ಬಳ್ಳಾರಿ ಹಾಗೂ ಗದಗ- ಬೆಟಗೇರಿ ನಗರಸಭೆ ಕೆಲ ಸದಸ್ಯರು, ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.