ADVERTISEMENT

MLC Election:ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿಲ್ಲ-ಮಹೇಶ ಟೆಂಗಿನಕಾಯಿ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2021, 7:15 IST
Last Updated 8 ಡಿಸೆಂಬರ್ 2021, 7:15 IST
ಮಹೇಶ ಟೆಂಗಿನಕಾಯಿ
ಮಹೇಶ ಟೆಂಗಿನಕಾಯಿ   

ಹುಬ್ಬಳ್ಳಿ: 'ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಯಾರೂ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿಲ್ಲ' ಎಂದು ಬಿಜೆಪಿ‌ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಪಕ್ಷದ ಮುಖಂಡರೆಲ್ಲರೂ ಒಗ್ಗಟ್ಟಿನಿಂದ ಪ್ರಚಾರ ಕಾರ್ಯ ಮಾಡುತ್ತಿದ್ದಾರೆ. ಅಖಂಡ ಧಾರವಾಡ ಜಿಲ್ಲಾ ವಿಧಾನ ಪರಿಷತ್ ಚುನಾವಣೆಗೆ ಪಕ್ಷದಿಂದ ಎರಡನೇ ಬಾರಿ ಸ್ಪರ್ಧಿಸಿರುವ ಪ್ರದೀಪ ಶೆಟ್ಟರ್ ಅವರಿಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ' ಎಂದರು.

'ಹಾವೇರಿಯಲ್ಲಿ ಎರಡು, ಗದುಗಿನಲ್ಲಿ ಒಂದು ಪ್ರಚಾರ ಸಭೆ ನಡೆಸಿ, ಪಟ್ಟಣ ಪಂಚಾಯ್ತಿ ಮತ್ತು ಗ್ರಾಮ ಪಂಚಾಯ್ತಿ ಸದಸ್ಯರಲ್ಲಿ ಮತ ಯಾಚಿಸಿದ್ದೇವೆ‌. ಒಟ್ಟಾರೆ ರಾಜ್ಯದ 25ಕ್ಷೇತ್ರಗಳಲ್ಲಿ 15 ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇದೆ' ಎಂದು ಹೇಳಿದರು.

ADVERTISEMENT

'ಎಲ್ಲ‌ ಪಂಚಾಯ್ತಿಗೆ ಇಂಟರ್ನೆಟ್ ಸೌಲಭ್ಯ, ನೇರ ಅನುದಾನ ಹಾಗೂ ಪಂಚಾಯಿತಿ ಸದಸ್ಯರಿಗೆ ಗೌರವ ಧನ ನೀಡಿದ್ದು ಬಿಜೆಪಿ ಸರ್ಕಾರ. ಗ್ರಾಮೀಣಾಭಿವೃದ್ಧಿಗೆ ಇನ್ನಷ್ಟು ಬಲ ನೀಡಲು ವಿಧಾನ ಪರಿಷತ್'ಲ್ಲಿ ನಮಗೆ ಬಹುಮತ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಪಂಚಾಯ್ತಿ ಸದಸ್ಯರು ನಮಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುವ ಭರವಸೆ ಇದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹುಧಾ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷರೂ ಆದ ಶಾಸಕ ಅರವಿಂದ ಬೆಲ್ಲದ, 'ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಯಲ್ಲಿ ಭರದಿಂದ ಪ್ರಚಾರ ನಡೆಯುತ್ತಿದೆ. ಬಿಜೆಪಿಯ ಜನಪರ ಕಾರ್ಯ ಜನರಿಗೆ ತಲುಪಬೇಕೆಂದರೆ ವಿಧಾನ ಪರಿಷತ್'ಲ್ಲಿ ಬಹುಮತ ಅಗತ್ಯ' ಎಂದರು.

ಮುಖಂಡರಾದ ದತ್ತಮೂರ್ತಿ ಕುಲಕರ್ಣಿ, ವಿಜಯಾನಂದ ಶೆಟ್ಟಿ, ತಿಪ್ಪಣ್ಣ ಮಜ್ಜಗಿ, ರವಿ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.