ಹುಬ್ಬಳ್ಳಿ: ಜನರಿಗೆ ಉಚಿತವಾಗಿ ಅಕ್ಕಿ ಕೊಡುತ್ತೇವೆ ಎಂದು ಘೋಷಣೆ ಮಾಡಿದಾಗ ಯಾರೂ ತಕರಾರು ತೆಗೆಯಲಿಲ್ಲ, ಈಗ ಉಚಿತವಾಗಿ ಲಸಿಕೆ ನೀಡುವುದಾಗಿ ಹೇಳಿದಾಗ ಇದರಲ್ಲಿ ರಾಜಕೀಯ ಬೆರೆಸುವುದು ಏಕೆ? ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಪ್ರಶ್ನಿಸಿದರು.
ಶನಿವಾರ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಲಸಿಕೆ ವಿಚಾರದಲ್ಲಿ ರಾಜಕೀಯ ಸಲ್ಲದು. ಬಿಹಾರದಲ್ಲಿ ಚುನಾವಣೆ ಇರುವ ಕಾರಣ ಉಚಿತವಾಗಿ ನೀಡುವ ಘೋಷಣೆ ಮಾಡಲಾಗಿದೆ. ಇದನ್ನು ಬೇರೆ ಪಕ್ಷದವರು ದೊಡ್ಡದು ಮಾಡುವ ಅಗತ್ಯವಿಲ್ಲ. ಬಡವರ ಬದುಕಿಗೆ ಅಕ್ಕಿ ಎಷ್ಟು ಮುಖ್ಯವೊ, ಕೊರೊನಾ ಲಸಿಕೆ ಕೂಡ ಅಷ್ಟೇ ಮುಖ್ಯ’ ಎಂದರು.
‘ಎಲ್ಲರಿಗೂ ಉಚಿತವಾಗಿ ಲಸಿಕೆ ಕೊಡಿ ಎಂದು ವಿರೋಧ ಪಕ್ಷಗಳು ಆಗ್ರಹಿಸಿದ್ದರೆ ಅದಕ್ಕೊಂದು ಅರ್ಥವಿರುತ್ತಿತ್ತು. ವಿರೋಧ ಪಕ್ಷಗಳು ವಿನಾಕಾರಣ ಮಾಡುತ್ತಿರುವ ಟೀಕೆಗೆ ಅರ್ಥವಿಲ್ಲ. ವಿಶ್ವನಾಥ್ ಅವರು ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೊ ಗೊತ್ತಿಲ್ಲ. ಇದರ ಬಗ್ಗೆ ಹೆಚ್ಚಿನ ಚರ್ಚೆಯೂ ಬೇಕಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.