ADVERTISEMENT

24x7 ನೀರು: ಕಾಮಗಾರಿ ತ್ವರಿತಕ್ಕೆ ಸೂಚನೆ

ಎಲ್‌ ಅಂಡ್ ಟಿ ಕಂಪನಿ ಅಧಿಕಾರಿಗಳೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಭೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2022, 3:01 IST
Last Updated 23 ಜೂನ್ 2022, 3:01 IST
ಹುಬ್ಬಳ್ಳಿ–ಧಾರವಾಡದ 24x7 ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಕುರಿತು, ಎಲ್ ಅಂಡ್ ಟಿ ಕಂಪನಿ ಅಧಿಕಾರಿಗಳೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನವದೆಹಲಿಯಲ್ಲಿ ಬುಧವಾರ ಸಭೆ ನಡೆಸಿದರು. ಸಚಿವ ಶಂಕರಪಾಟೀಲ ಮುನೇನಕೊಪ್ಪ ಇದ್ದಾರೆ
ಹುಬ್ಬಳ್ಳಿ–ಧಾರವಾಡದ 24x7 ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಕುರಿತು, ಎಲ್ ಅಂಡ್ ಟಿ ಕಂಪನಿ ಅಧಿಕಾರಿಗಳೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನವದೆಹಲಿಯಲ್ಲಿ ಬುಧವಾರ ಸಭೆ ನಡೆಸಿದರು. ಸಚಿವ ಶಂಕರಪಾಟೀಲ ಮುನೇನಕೊಪ್ಪ ಇದ್ದಾರೆ   

ಹುಬ್ಬಳ್ಳಿ: ‘ಅವಳಿನಗರಕ್ಕೆ 24x7 ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಯ ಕಾಮಗಾರಿಯನ್ನು ಚುರುಕುಗೊಳಿಸಿ, ನಿಗಿದಿತ ಎರಡು ವರ್ಷದೊಳಗೆ ಪೂರ್ಣಗೊಳಿಸಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಾಕೀತು ಮಾಡಿದರು.

ಯೋಜನೆಯ ಟೆಂಡರ್ ಪಡೆದಿರುವ ಎಲ್ ಅಂಡ್ ಟಿ ಕಂಪನಿಯ ಅಧಿಕಾರಿಗಳೊಂದಿಗೆ ನವದೆಹಲಿಯಲ್ಲಿ ಬುಧವಾರ ಅವರು ಸಭೆ ನಡೆಸಿದರು. ಕಂಪನಿಗೆ ನೀರು ಪೂರೈಕೆ ಮಾಡುವ ಜವಾಬ್ದಾರಿ ಹಸ್ತಾಂತರಗೊಂಡರೂ ಅವಳಿನಗರದಲ್ಲಿ ನೀರಿನ ಸಮಸ್ಯೆ ಬಗೆಹರಿಯದಿರುವ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ‘ಈ ಕುರಿತು ಎದುರಾಗಿರುವ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಬೇಕು’ ಎಂದು ಸೂಚಿಸಿದರು.

‘ಸ್ಮಾರ್ಟ್ ಸಿಟಿ, ವಿಮಾನ ನಿಲ್ದಾಣ ಅಭಿವೃದ್ಧಿ, ಕೇಂದ್ರ ರಸ್ತೆ ನಿಧಿಯಡಿ ರಸ್ತೆ ನಿರ್ಮಾಣ, ಬಿಆರ್‌ಟಿಎಸ್ ಸೇರಿದಂತೆ ಹಲವು ಯೋಜನೆಗಳು ಅವಳಿನಗರದಲ್ಲಿ ಕಾರ್ಯರೂಪಕ್ಕೆ ಬಂದಿವೆ. ದೊಡ್ಡ ಕೈಗಾರಿಕೆಗಳು ಸಹ ಬಂದಿವೆ. ಇದಕ್ಕೆ ಪೂರಕವಾಗಿ ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

‘ಪೈಪ್‌ಲೈನ್‌ಗಾಗಿ ರಸ್ತೆ ಅಗೆದರೆ, ಕಾಮಗಾರಿ ಮುಗಿದ ಬಳಿಕ ರಸ್ತೆಯನ್ನು ಮರು ನಿರ್ಮಾಣ ಮಾಡಬೇಕು. ಜನರಿಗೆ ತೊಂದರೆಯಾಗದಂತೆ ಹಂತ ಹಂತವಾಗಿ ವಾರ್ಡ್‌ವಾರು ಕಾಮಗಾರಿ ನಡೆಸಬೇಕು’ ಎಂದರು.

ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕ ಅಮೃತ ದೇಸಾಯಿ, ಮೇಯರ್ ಈರೇಶ ಅಂಚಟಗೇರಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಕಂಪನಿಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.