ಹುಬ್ಬಳ್ಳಿ: ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಕೊಲೆಯಾದ ಇಲ್ಲಿನ ಬಿಡ್ನಾಳದ ನೇಹಾ ಹಿರೇಮಠ ಅವರ ನಿವಾಸಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಶನಿವಾರ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ನಂತರ ಮಾತನಾಡಿದ ಸಚಿವೆ ಹೆಬ್ಬಾಳಕರ, 'ನೇಹಾ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಅವಳ ದುಃಖ ಹಂಚಿಕೊಂಡಿದ್ದಾರೆ. ಅವರದ್ದು ದೊಡ್ಡ ಸಮುದಾಯವಾಗಿದ್ದು, ನಾವೆಲ್ಲಾ ಜೊತೆಯಲ್ಲಿ ಇದ್ದೇವೆ ಎಂದು ಭರವಸೆ ನೀಡಿದ್ದೇನೆ. ಇಂತಹ ಸಂದರ್ಭದಲ್ಲಿ ಸಾಂತ್ವನ, ಸಮಾಧಾನ ಹೇಳಿದರೆ ಸಾಲದು' ಎಂದು ಹೇಳಿದರು.
'ಪ್ರಕರಣದ ತನಿಖೆ ಬಗ್ಗೆ ಯಾರಿಗೂ, ಯಾವುದೇ ಸಂಶಯ ಬೇಡ. ನಿಷ್ಪಕ್ಷಪಾತವಾಗಿ ತನಿಖೆ ನಡೆದು, ಆರೋಪಿಗೆ ಶೀಘ್ರ ಶಿಕ್ಷೆಯಾಗಲಿದೆ. ನಾನೊಬ್ಬ ತಾಯಿಯಾಗಿ ಈ ಘಟನೆಯನ್ನು ಖಂಡಿಸುತ್ತೇನೆ. ಆ ಹೆಣ್ಣು ಮಗಳಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ. ನೇಹಾ ತಂದೆ ನಿರಂಜನ ಹಿರೇಮಠ ಅವರು ನಮ್ಮ ಪಕ್ಷದ ಪಾಲಿಕೆ ಸದಸ್ಯರು. ಅವರ ಮಗಳಿಗೆ ಸೂಕ್ತ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಸರ್ಕಾರ ಮಾಡಲಿದೆ' ಎಂದು ಹೇಳಿದರು.
ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ, ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ, ಪಾಲಿಕೆ ವಿರೋಧ ಪಕ್ಷದ ನಾಯಕಿ ಸುವರ್ಣ ಕಲ್ಲಕುಂಟ್ಲ, ಮೋಹನ ಲಿಂಬಿಕಾಯಿ, ಬಂಗಾರೇಶ ಹಿರೇಮಠ, ರಾಜಶೇಖರ ಮೆಣಸಿನಕಾಯಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.