ಹುಬ್ಬಳ್ಳಿ: ‘ಬಿಜೆಪಿ ನಾಯಕರಿಗೆ ಅಭಿವೃದ್ಧಿ ಕೆಲಸ ಮಾಡಲು ಬರಲ್ಲ, ಕೆಲಸ ಮಾಡುವುದಕ್ಕೂ ಬಿಡುವುದಿಲ್ಲ. ಹೀಗಾಗಿ ಅವರ ಮಾತುಗಳಿಗೂ ಕಿಮ್ಮತ್ತು ಕೊಡಬೇಕಾಗಿಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟೀಕಿಸಿದರು.
ಇಲ್ಲಿನ ಗೋಕುಲ್ ರಸ್ತೆಯ ಬಸ್ ನಿಲ್ದಾಣ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ವಾಸ್ತವಾಂಶ ಮರೆಮಾಚಿ ಕರ ಸೇವಕರ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೆಲ್ಲವೂ ಚುನಾವಣೆ ಗಿಮಿಕ್. ಅವರ ಮಾತಿಗೆ ಕಿಮ್ಮತ್ತು ಕೊಡಬೇಕಾಗಿಲ್ಲ. ಬಿಜೆಪಿಯವರ ಮಾತಿಗೆ ಕಿಮ್ಮತ್ತಿಲ್ಲ ಎನ್ನುವ ಕಾರಣಕ್ಕಾಗಿಯೇ ರಾಜ್ಯದ ಜನರು ಅವರನ್ನು ಮನೆಗೆ ಕಳಿಸಿದ್ದಾರೆ’ ಎಂದು ಲೇವಡಿ ಮಾಡಿದರು.
‘ಬಿಜೆಪಿಯವರು ಹಿಂದುತ್ವ ಮತ್ತು ದೇವರುಗಳನ್ನು ರಾಜಕಾರಣಕ್ಕೆ ಬಂಡವಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಎಂದಿಗೂ ಆ ಕೆಲಸ ಮಾಡಿಲ್ಲ. ಕಾಂಗ್ರೆಸ್ನಲ್ಲಿ ನಿಜವಾದ ಹಿಂದೂಗಳಿದ್ದಾರೆ’ ಎಂದು ಹೇಳಿದರು.
ಪಲ್ಲಕ್ಕಿ ಬಸ್ಸೇವೆ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಐಷಾರಾಮಿ ವ್ಯವಸ್ಥೆ ಇರುವ ಒಟ್ಟು 24 ‘ಪಲ್ಲಕ್ಕಿ’ ಬಸ್ಗಳನ್ನು ಖರೀದಿಸುತ್ತಿದ್ದು, ಸೋಮವಾರ ನಾಲ್ಕು ಬಸ್ಗಳಿಗೆ ಹಸಿರುನಿಶಾನೆ ತೋರಿಸಲಾಯಿತು. ₹23.48 ಕೋಟಿ ವೆಚ್ಚದಲ್ಲಿ ಗೋಕುಲ್ ರಸ್ತೆಯ ಬಸ್ ನಿಲ್ದಾಣ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.