ADVERTISEMENT

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿದ್ಧಾರೂಢರ ಹೆಸರು: ಸಿಎಂಗೆ ಮನವಿ

​ಪ್ರಜಾವಾಣಿ ವಾರ್ತೆ
Published 4 ಜನವರಿ 2019, 10:58 IST
Last Updated 4 ಜನವರಿ 2019, 10:58 IST

ಹುಬ್ಬಳ್ಳಿ: ಇಲ್ಲಿನ ವಿಮಾನ ನಿಲ್ದಾಣಕ್ಕೆ ಸಿದ್ಧಾರೂಢರ ಹೆಸರಿಡಬೇಕು ಎಂದು ಶ್ರೀ ಸಿದ್ಧಾರೂಢ ಮಠ ಟ್ರಸ್ಟ್ ಕಮಿಟಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿತು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಅವರು ಕೇಂದ್ರಕ್ಕೆ ಶಿಫಾರಸು ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಕಮಿಟಿ ಸದಸ್ಯರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಸಿದ್ಧಾರೂಢರು ಧರ್ಮ, ಜಾತಿ, ಮತ, ಪಂಥದ ಭೇದ ಇಲ್ಲದೆ ಎಲ್ಲರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಿದವರು. ರಾಜ್ಯ, ಹೊರ ರಾಜ್ಯಗಳಲ್ಲಿ ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿದ್ದಾರೆ. ಪ್ರತಿ ನಿತ್ಯ ಸಾವಿರಾರು ಜನರು ಮಠಕ್ಕೆ ಭೇಟಿ ನೀಡಿ ಗದ್ದುಗೆ ದರ್ಶನ ಮಾಡಿಕೊಂಡು ಹೋಗುತ್ತಿದ್ದಾರೆ. ವಿಮಾನ ನಿಲ್ದಾಣಗಳಿಗೆ ಸಂತರ ಹೆಸರನ್ನು ಇಟ್ಟಿರುವ ಹಲವಾರು ಉದಾಹರಣೆಗಳು ನಮ್ಮ ಮುಂದಿವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಪುಟ್ಟಪರ್ತಿ ಸತ್ಯಸಾಯಿ ವಿಮಾನ ನಿಲ್ದಾಣ, ರಾಯಪುರ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣ ಎಂದು ಹೆಸರಿಡಲಾಗಿದೆ. ಅದೇ ರೀತಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿದ್ಧಾರೂಢರ ಹೆಸರಿಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿ ಎಂದು ಅವರು ವಿನಂತಿಸಿದ್ದಾರೆ.

ADVERTISEMENT

ಮಠ ಟ್ರಸ್ಟ್ ಕಮಿಟಿ ಮುಖ್ಯಸ್ಥ ಡಿ.ಡಿ. ಮಾಳಗಿ, ಉಪ ಮುಖ್ಯಸ್ಥ ಎಸ್‌.ಡಿ. ಉಕ್ಕಲಿ, ಗೌರವ ಕಾರ್ಯದರ್ಶಿ ಎಸ್‌.ಐ. ಕೋಳಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.