ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಪ್ರಯುಕ್ತ ಧಾರವಾಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಆಯೋಜಿಸಿದ್ದ ‘ನಮೊ ಯುವ ರನ್’ ಮ್ಯಾರಥಾನ್ನಲ್ಲಿ ಯುವಕರು, ವಿದ್ಯಾರ್ಥಿಗಳು, ಪಕ್ಷದ ಕಾರ್ಯಕರ್ತರು, ಮುಖಂಡರು, ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡರು.
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನಗರದ ತೋಳನಕೆರೆ ಬಳಿ ಮ್ಯಾರಥಾನ್ಗೆ ಚಾಲನೆ ನೀಡಿದರು. ತೋಳನಕೆರೆಯಿಂದ ಶ್ರೀಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯ ಮತ್ತು ಅಲ್ಲಿಂದ ಪುನಃ ತೋಳನಕೆರೆವರೆಗೆ ಓಟ ನಡೆಯಿತು.
ವೆಂಕಟೇಶ ಪ್ರಸಾದ್ ಮಾತನಾಡಿ, ‘ನಶೆ ಮುಕ್ತ ಭಾರತ ನಿರ್ಮಾಣಕ್ಕೆ ಈ ಓಟ ಆಯೋಜಿಸಿರುವುದು ಉತ್ತಮ ಕಾರ್ಯ. ಯುವಕರು ದುಶ್ಚಟಗಳ ದಾಸರಾಗಿ ಜೀವನ ಹಾಳು ಮಾಡಕೊಳ್ಳಬಾರದು. ಪಾಲಕರು ಮಕ್ಕಳನ್ನು ಓದಿಗೆ ಸೀಮಿತ ಮಾಡಬಾರದು. ಪ್ರತಿ ದಿನ ಎರಡು ಗಂಟೆಯಾದರೂ ಕ್ರೀಡೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು’ ಎಂದರು.
‘ನರೇಂದ್ರ ಮೋದಿ ಪ್ರಧಾನಿಯಾದ ನಂತರ ಅನೇಕ ಉತ್ತಮ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಖೇಲೊ ಇಂಡಿಯಾ ಸೇರಿ ಹಲವು ಯೋಜನೆಗಳ ಮೂಲಕ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಹುಬ್ಬಳ್ಳಿಯಲ್ಲಿಯೂ ನಾನು ಕ್ರಿಕೆಟ್ ಪಂದ್ಯಗಳನ್ನು ಆಡಿದ್ದೇನೆ. ಇಲ್ಲಿಂದಲೂ ಉತ್ತಮ ಕ್ರಿಕೆಟಿಗರು ಹೊರಹೊಮ್ಮಿದ್ದಾರೆ’ ಎಂದು ಹೇಳಿದರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ‘2047ಕ್ಕೆ ವಿಕಸಿತ ಭಾರತ ನಿರ್ಮಾಣದ ಕನಸನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ. ಯುವಜನರು ಸದೃಢವಾಗಿರುವ ದೇಶ ಎಲ್ಲ ಕ್ಷೇತ್ರಗಳಲ್ಲಿಯೂ ಬಲಿಷ್ಠವಾಗಿರುತ್ತದೆ. ದೇಶವನ್ನು ನಶೆ ಮುಕ್ತ ಮಾಡಬೇಕು ಎಂಬ ಪ್ರಧಾನಿಯವರ ಕನಸು ಸಾಕಾರಗೊಳಿಸಲು ಎಲ್ಲರೂ ಕೈಜೋಡಿಸಬೇಕು’ ಎಂದರು.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ‘ಮಾದಕವಸ್ತು ಸಮಾಜದ ದೊಡ್ಡ ಪಿಡುಗು. ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಅದು ನಿರ್ಮೂಲನೆ ಆಗುತ್ತಿಲ್ಲ. ಯುವಕರು ಮಾದಕವಸ್ತು ಸೇವನೆ ದುಶ್ಚಟದಿಂದ ಹೊರಬಂದು ಉತ್ತಮ ಭವಿಷ್ಯ ರೂಪಿಸಿಕೊಳ್ಳನಬೇಕು’ ಎಂದು ಹೇಳಿದರು.
ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಮಾತನಾಡಿ, ‘ಮಾದಕ ವಸ್ತುಗಳ ದಾಸರಾದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ. ಈ ಬಗ್ಗೆ ಪಾಲಕರು ಮಕ್ಕಳಿಗೆ ಜಾಗೃತಿ ಮೂಡಿಸುವ ಜತೆಗೆ ಅವರ ಮೇಲೆ ನಿಗಾ ವಹಿಸಬೇಕು’ ಎಂದರು.
ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಬಿಜೆಪಿ ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮಾತನಾಡಿದರು.
ಓಟದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಟಿ–ಶರ್ಟ್, ಕ್ಯಾಪ್, ಪ್ರಮಾಣಪತ್ರ ನೀಡಲಾಯಿತು. ಮಾರ್ಗಮಧ್ಯೆ ಕುಡಿಯುವ ನೀರಿನ ವ್ಯವಸ್ಥೆ, ತುರ್ತು ಚುಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು. ಯುವಕರು ಮೋದಿ ಪರ ಘೋಷಣೆ ಕೂಗಿದರು.
ಧಾರವಾಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶ್ರೀ ಪ್ರೀತಂ ಅರಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಹರೀಶ ಪೂಂಜಾ, ಮೇಯರ್ ಜ್ಯೋತಿ ಪಾಟೀಲ, ಉಪ ಮೇಯರ್ ಸಂತೋಷ ಚವ್ಹಾಣ್, ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಅಶೋಕ ಕಾಟವೆ, ಶಿವು ಮೆಣಸಿನಕಾಯಿ, ಮಹೇಂದ್ರ ಕೌತಾಳ, ಕೆಎಲ್ಇ ತಾಂತ್ರಿಕ ವಿ.ವಿಯ ಸಮ ಕುಲಪತಿ ಪ್ರೊ.ಅಶೋಕ ಶೆಟ್ಟರ್ ಭಾಗವಹಿಸಿದ್ದರು.ಓಟ ಒಂದು ದಿನಕ್ಕೆ ಸೀಮಿತವಾಗಬಾರದು. ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಪ್ರತಿ ದಿನ ದೈಹಿಕ ಚಟುವಟಿಕೆ ಅವಶ್ಯ. ಯುವಕರು ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ
ಮೋದಿ ಅವರು ದೇಶದ ಉನ್ನತಿಗೆ ಶ್ರಮಿಸುತ್ತಿದ್ದಾರೆ. ಯುವಕರು ‘ನಶೆ’ ಹಿಂದೆ ಬೀಳದೆ ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸಬೇಕು. ಆರೋಗ್ಯ ಕಾಪಾಡಿಕೊಳ್ಳಬೇಕುಹರ್ಷಿಕಾ ಪೂಣಚ್ಚ ನಟಿ
ಓಟ ಒಂದು ದಿನಕ್ಕೆ ಸೀಮಿತವಾಗಬಾರದು. ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಪ್ರತಿ ದಿನ ದೈಹಿಕ ಚಟುವಟಿಕೆ ಅವಶ್ಯ. ಯುವಕರು ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆವೆಂಕಟೇಶ ಪ್ರಸಾದ್ ಮಾಜಿ ಕ್ರಿಕೆಟಿಗ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.