ಹುಬ್ಬಳ್ಳಿ: ಕಳೆದ ಒಂದು ವಾರದಿಂದ ಕೋವಿಡ್ ಪಾಸಿಟಿವ್ ಹಾಗೂ ಓಮೈಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ನಿರ್ಲಕ್ಷ್ಯವಹಿಸಿದರೆ ಮೂರನೇ ಅಲೆ ಬರುವ ಸಾಧ್ಯತೆಯಿದೆ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.
ಆರೋಗ್ಯ ಇಲಾಖೆ, ಹುಧಾ ಮಹಾನಗರ ಪಾಲಿಕೆ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಸೋಮವಾರ ನಾಗಶೆಟ್ಟಿಕೊಪ್ಪದ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ 15 ರಿಂದ 18 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋವಿಡ್ ಮೂರನೇ ಅಲೆ ಬರುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಸಹ ಜಾತ್ರೆ, ಸಮಾರಂಭಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರದೆ, ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ವಿನಂತಿಸಿದರು.
ದೇಶದಾದ್ಯಂತ ಇಂದಿನಿಂದ15 ರಿಂದ 18ನೇ ವರ್ಷದ ಮಕ್ಕಳಿಗೆ ಉಚಿತ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಒಂದು ಲಸಿಕೆಗೆ ₹8ನೂರರಿಂದ ₹1ಸಾವಿರ ವೆಚ್ಚವಾಗುತ್ತದೆ. ಜನರ ಆರೋಗ್ಯ ದೃಷ್ಟಿಯಿಂದ ಆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ವೈಜ್ಞಾನಿಕ ವರದಿ ಆಧರಿಸಿ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಧಿಕಾರಿಗಳು ವಿದ್ಯಾರ್ಥಿಗಳ, ಪಾಲಕರ ಮನವೊಲಿಸಿ ಲಸಿಕೆ ಪಡೆಯಲು ಪ್ರೇರೇಪಿಸಬೇಕು ಎಂದರು.
ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮುಖಂಡರಾದ ಮಲ್ಲಿಕಾರ್ಜುನ ಸಾವುಕಾರ, ಸಂತೋಷ ಚವ್ಹಾಣ್, ಪ್ರಕಾಶ ಕುರಹಟ್ಟಿ, ಬೀರಪ್ಪ ಖಂಡೇಕರ, ಪಾಲಿಕೆ ವೈದ್ಯಾಧಿಕಾರಿ ಶ್ರೀಧರ ದಂಡೆಪ್ಪನವರ, ಬಿಇಒ ಶ್ರೀಶೈಲ ಕರಿಕಟ್ಟಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.