ಹುಬ್ಬಳ್ಳಿ: ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೇ 1ರಂದು ಹುಬ್ಬಳ್ಳಿಗೆ ಬಂದು ನೇಹಾ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಅಂದು ಅವರ ಜೊತೆ ನೇಹಾ ಕೊಲೆ ಪ್ರಕರಣದ ತನಿಖೆ ಕುರಿತು ಚರ್ಚಿಸುತ್ತೇವೆ’ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ಭಾನುವಾರ ನೇಹಾ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕೊಲೆ ಮಾಡಿರುವ ವ್ಯಕ್ತಿಯ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಅವನ ಹಿಂದೆ ಯಾರ್ಯಾರು ಇದ್ದಾರೆ, ಕೊಲೆಯ ಹಿಂದೆ ಯಾರ ಕೈವಾಡವಿದೆ ಎನ್ನುವುದು ಸಹ ತನಿಖೆ ನಡೆಯಬೇಕು. ಆರೋಪಿಗಷ್ಟೇ ಅಲ್ಲ, ಕೊಲೆಗೆ ಪ್ರೇರಣೆ ನೀಡಿದವರಿಗೂ ಕಠಿಣ ಶಿಕ್ಷೆಯಾಗಬೇಕು‘ ಎಂದು ಆಗ್ರಹಿಸಿದರು.
‘ಸಿಐಡಿ ಅಧಿಕಾರಿಗಳು ಪಕ್ಷಾತೀತವಾಗಿರುತ್ತಾರೆ. ಅವರಿಂದ ನಿಷ್ಪಕ್ಷಪಾತ ತನಿಖೆ ನಡೆಯುತ್ತದೆ ಎನ್ನುವ ದೃಷ್ಟಿಯಿಂದ ಮುಖ್ಯಮಂತ್ರಿ ಅವರು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದಾರೆ. ಇದರಲ್ಲಿ ಯಾರೂ ಹಸ್ತಕ್ಷೇಪ ಮಾಡುವುದಿಲ್ಲ ಎನ್ನುವ ವಿಶ್ವಾಸವಿದೆ. ತನಿಖೆ ಸಮರ್ಪಕವಾಗಿಲ್ಲ, ಯಾರಾದರೂ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದೆನಿಸಿದರೆ ನಾವು ಉಗ್ರವಾದ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.