ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಪ್ರಹ್ಲಾದ ಜೋಶಿ ಅವರು ಹುಬ್ಬಳಿ ನಗರದ ನೆಹರೂ ಮೈದಾನದಲ್ಲಿ ಬೆಳಿಗ್ಗೆ ವಿವಿಧ ಆಟಗಳನ್ನು ಆಡುವ ಮೂಲಕ ಕ್ರೀಡಾಪಟುಗಳು ಹಾಗೂ ವಾಯು ವಿಹಾರಿಗಳಲ್ಲಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಕ್ರೀಡಾಪಟುಗಳು ನೆಹರೂ ಮೈದಾನಕ್ಕೆ ಮೂಲಸೌಲಭ್ಯ ಕಲ್ಪಿಸುವಂತೆ ಜೋಶಿ ಅವರಲ್ಲಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜೋಶಿ, ನೆಹರೂ ಮೈದಾನದ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆ ಅಡಿ ಕೈಗೆತ್ತಿಕೊಳ್ಳಲಾಗಿದೆ. ಆದರೆ, ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಅಭಿವೃದ್ಧಿ ಕಾಮಗಾರಿ ವಿಳಂಬವಾಗಿದ್ದು ಚುನಾವಣೆ ಬಳಿಕ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಐತಿಹಾಸಿಕ ಜಯ ನನ್ನದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ ಮೂರು ಅವಧಿಯಲ್ಲಿ ಸಂಸದನಾಗಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಮೋದಿ ಅವರ ಮೇಲಿನ ಜನರ ವಿಶೇಷ ಅಭಿಮಾನದಿಂದ ಗೆಲುವಿನ ಅಂತರ ಈ ಬಾರಿ ಎರಡು ಪಟ್ಟು ಹೆಚ್ಚಾಗಲಿದೆ ಎಂದರು.
ತಾರಾ ಅನುರಾಧ ಪ್ರಚಾರ
ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಪರವಾಗಿ ನಟಿ ತಾರಾ ಅನುರಾಧಾ ಹುಬ್ಬಳ್ಳಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಾರಿ ಜೋಶಿ ಅವರು ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ. ಕೇಂದ್ರದಲ್ಲಿ ಮಂತ್ರಿಯಾಗುವುದು ಖಚಿತ. ಈ ಮೂಲಕ ದಿವಂಗತ ಅನಂತಕುಮಾರ್ ಅವರ ಸ್ಥಾನವನ್ನು ಜೋಶಿ ತುಂಬಲಿದ್ದಾರೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.