ಹುಬ್ಬಳ್ಳಿ: ಧಾರವಾಡ ಜಿಲ್ಲೆಗೆ ಶಾಶ್ವತ ವಸ್ತು ಪ್ರದರ್ಶನ ಕೇಂದ್ರ ಕಾಮಗಾರಿಗೆ ಅಗತ್ಯವಿರುವ ಆಡಳಿತಾತ್ಮಕ ಒಪ್ಪಿಗೆಯನ್ನು ಕೂಡಲೇ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಗುರುವಾರ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರಿನ ಖನಿಜ ಭವನದಲ್ಲಿ ಎಂಎಸ್ಎಂಇ ಹಾಗೂ ಗಣಿ ಇಲಾಖೆ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿ ‘ಕೇಂದ್ರ ಸ್ಥಾಪನೆಗೆ ಆಡಳಿತಾತ್ಮಕ ಒಪ್ಪಿಗೆಯಷ್ಟೇ ಬಾಕಿಯಿದ್ದು, ಇದರಿಂದ ನಾಲ್ಕು ತಿಂಗಳುಗಳಿಂದ ಕಾಮಗಾರಿ ಸ್ಥಗಿತಗೊಂಡಿದೆ. ಕೂಡಲೇ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಗೆ ಒಪ್ಪಿಗೆ ಪತ್ರ ಕಳುಹಿಸಬೇಕು’ ಎಂದು ಹೇಳಿದರು.
ಇದೇ ವೇಳೆ ಹುಬ್ಬಳ್ಳಿಯಲ್ಲಿ ಕರ್ನಾಟಕ ವಸ್ತು ಪರೀಕ್ಷಾ ಮತ್ತು ಸಂಶೋಧನಾ ಕೇಂದ್ರಕ್ಕೆ ಗುರುತಿಸಲಾಗಿರುವ ಜಾಗವನ್ನು 99 ವರ್ಷಗಳಿಗೆ ಗುತ್ತಿಗೆ ಆಧಾರದ ಮೇಲೆ ನೀಡುವಂತೆಯೂ ಹೇಳಿದರು.
ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಸಂಶೋಧನಾ ಕೇಂದ್ರಕ್ಕೆ ತನ್ನ ಕಾರ್ಯವ್ಯಾಪ್ತಿ ಹೆಚ್ಚಿಕೊಳ್ಳುವ ನಿಟ್ಟಿನಲ್ಲಿ ನಿವೇಶನದ ಅವಶ್ಯಕತೆ ಇದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದರೂ ಕೇಂದ್ರ ಹಾಗೂ ರಾಜ್ಯದಿಂದ ಜಾಗ ನೀಡುವ ಬಗ್ಗೆ ನಿರಾಪೇಕ್ಷಣ ಪತ್ರ ಬಂದಿಲ್ಲ ಎಂದು ಅನುದಾನಿತ ಸಂಸ್ಥೆ ಪದಾಧಿಕಾರಿಗಳು ಸಚಿವರ ಗಮನಕ್ಕೆ ತಂದರು.
ಈ ವಿಷಯವನ್ನು ಎಂಎಸ್ಎಂಇ ಹಾಗೂ ಗಣಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಹೇಶ್ವರ ರಾವ್ ಅವರ ಗಮನಕ್ಕೆ ತಂದು ನಿವೇಶನ ಮಂಜೂರಿಗೆ ಶೆಟ್ಟರ್ ಸೂಚಿಸಿದರು.
ಎಂಎಸ್ಎಂಇ ಇಲಾಖೆಯ ನಿರ್ದೇಶಕ ಜಿಯಾವುಲ್ಲಾ ಖಾನ್ ಮತ್ತು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸದಸ್ಯರು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ ಶಿರೂರ್, ಕರ್ನಾಟಕ ವಸ್ತು ಪರೀಕ್ಷಾ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಟಿ. ನಾಗರಾಜ ಡ್ಯೂಟಿ, ಪ್ರಧಾನ ಕಾರ್ಯದರ್ಶಿ ಮಲ್ಲೇಶ ಜಾಡರ್ ಹಾಗೂ ಸಿಇಒ ನರೇಂದ್ರ ಕುಲಕರ್ಣಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.