ಹುಬ್ಬಳ್ಳಿ: ವಿಜಯಪುರ ರಸ್ತೆಯಿಂದ ನರೇಂದ್ರವರೆಗಿನ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಡಿಪಿಆರ್ (ಡಿಟೇಲ್ ಪ್ರಾಜೆಕ್ಟ್ ರಿಪೋರ್ಟ್) ಸಿದ್ಧಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಇಲ್ಲಿನ ಅಮರಗೋಳ ಎಪಿಎಂಸಿಯಲ್ಲಿರುವ ವಿವಿದೊದ್ದೇಶ ವಸ್ತು ಪ್ರದರ್ಶನ ಕೇಂದ್ರ ಆವರಣದಲ್ಲಿ ₹88 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಏಳು ಮಳಿಗೆಗಳ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಈಗಾಗಲೇ ಗದಗ–ವಿಜಯಪುರ, ಗದಗ–ಕಾರವಾರ ರಸ್ತೆಗಳಿಗೆ ರಿಂಗ್ ರಸ್ತೆ ನಿರ್ಮಾಣ ಕಾರ್ಯ ನಡೆದಿದೆ. ಈ ರಸ್ತೆಗಳಲ್ಲಿ ವಾಹನಗಳ ಸಂಚಾರ ಆರಂಭವಾದರೆ, ಚನ್ನಮ್ಮ ವೃತ್ತದ ಮೇಲಿನ ಸಂಚಾರ ಒತ್ತಡ ಶೇ50 ರಷ್ಟು ಕಡಿಮೆಯಾಗಲಿದೆ ಎಂದು ಹೇಳಿದರು.
ಅಂಚಟಗೇರಿ ಬಳಿ ಟ್ರಕ್ ಟರ್ಮಿನಲ್ ನಿರ್ಮಿಸಲು 60 ಎಕರೆ ಜಾಗ ಗುರುತಿಸಲಾಗಿದೆ. ಅಲ್ಲೊಂದಿಷ್ಟು ಆಶ್ರಯ ಮನೆಗಳಿವೆ. ಅವುಗಳನ್ನು ಹೊರತುಪಡಿಸಿ ಉಳಿದ ಜಾಗದಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸಲಾಗುವುದು. ಇದರಿಂದ ಸ್ಥಳೀಯವಾಗಿಯೂ ಕೆಲವು ಉದ್ಯೋಗಗಳು ದೊರೆಯಲಿವೆ ಎಂದರು.
ವಿವಿದೊದ್ದೇಶ ವಸ್ತು ಪ್ರದರ್ಶನ ಕೇಂದ್ರದಲ್ಲಿ ಈಗಾಗಲೇ ನಿರ್ಮಿಸಲಾಗಿರುವ ವಸ್ತು ಪ್ರದರ್ಶನ ಕಾಮಗಾರಿಯನ್ನು ಪೂರ್ಣಗೊಳಿಸುವುದರ ಜತೆಗೆ, ಹೊಸದಾಗಿ ಏಳು ಮಳಿಗೆಗಳನ್ನು ನಿರ್ಮಿಸಲಾಗುತ್ತಿದೆ. ಸರ್ಕಾರಿಂದ ₹1.32 ಕೋಟಿ ಬಿಡುಗಡೆಯಾದ ಮೇಲೆ ಇನ್ನುಷ್ಟು ಮಳಿಗೆಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಕರಕುಶಲ, ಪ್ಲಾಸ್ಟಿಕ್, ಅಟೊಮೊಬೈಲ್, ಸ್ಟಾರ್ಟ್ ಅಪ್ನವರಿಗೆ ವಸ್ತು ಪ್ರದರ್ಶನಕ್ಕೆ ಅವಕಾಶ ನೀಡಲಾಗುವುದು. ಉತ್ತರ ಕರ್ನಾಟಕದ ಉದ್ಯಮಿಗಳಿಗೆ ಇದು ವೇದಿಕೆಯಾಗಲಿದೆ. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.
ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಮಹೇಂದ್ರ ಲದ್ದಡ, ಉದ್ಯಮಿ ಶಂಕರಣ್ಣ ಮುನವಳ್ಳಿ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.