ಹುಬ್ಬಳ್ಳಿ: ‘ಈರುಳ್ಳಿ ಬೆಳೆಗೆ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ) ದರ ನಿಗದಿಪಡಿಸಿ ಅವಶ್ಯವಿದ್ದಲ್ಲಿ ರಫ್ತು ಮಾಡಲು ಅವಕಾಶ ನೀಡಬೇಕು’ ಎದು ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎಚ್. ಕೋನರಡ್ಡಿ ಮನವಿ ಮಾಡಿದರು.
ಕೇಂದ್ರ ಸರ್ಕಾರದ ಅಧ್ಯಯನ ತಂಡವು ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಈರುಳ್ಳಿ ಬೆಳೆ ವೀಕ್ಷಣೆಗೆ ಬಂದಿದ್ದ ವೇಳೆ ಮಾತನಾಡಿದರು.
ರೈತ ಅಣ್ಣಿಗೇರಿ ಅವರು ಬೆಳೆದ ಈರುಳ್ಳಿ ಬೆಳೆಯನ್ನು ವೀಕ್ಷಣೆ ಮಾಡಿದ ಕೇಂದ್ರ ಅಧ್ಯಯನ ತಂಡ, ‘ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ರೈತರು ಈರುಳ್ಳಿ ಬೆಳೆಯುವುದನ್ನು ಕಡಿಮೆ ಮಾಡುತ್ತಿದ್ದಾರೆ. ಇದರಿಂದ ದೇಶದಲ್ಲಿ ಈರುಳ್ಳಿಯ ಅಭಾವ ಸೃಷ್ಟಿಯಾಗುವ ಸಂಭವವಿದೆ. ಹಾಗಾಗಿ ರೈತರು, ಸ್ಥಳೀಯ ಜನಪ್ರತಿನಿಧಿಗಳಿಂದ ಅಭಿಪ್ರಾಯ ಪಡೆದು ಯೋಜನೆ ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ’ ಎಂದು ಭಾರತ ಸರ್ಕಾರದ ಕೃಷಿ ಹಾಗೂ ರೈತರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಮನೋಜ ಕೆ. ಹೇಳಿದರು.
ಸಭೆ ಇಂದು: ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಎಪಿಎಂಸಿಯಲ್ಲಿ ದಲ್ಲಾಳಿಗಳ ಹಾಗೂ ಖರೀದಿದಾರರ ಸಭೆಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಕಾಶಿನಾಥ ಭದ್ರಣ್ಣವರ, ಹುಬ್ಬಳ್ಳಿ ತಹಶೀಲ್ದಾರ್ ಪ್ರಕಾಶ ನಾಶಿ, ಪೊಲೀಸ್ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ, ಸಹಾಯಕ ನಿರ್ದೇಶಕ ಉಮೇಶ ಪಾಟೀಲ, ರೈತರಾದ ಮಹಾಬಳೇಶ ಅಣ್ಣಿಗೇರಿ, ಪ್ರಕಾಶಗೌಡ ಹನಮರಡ್ಡಿ, ಶಿವಣ್ಣ ಹುಬ್ಬಳ್ಳಿ, ತಾಜುದ್ದೀನ ಮುಲ್ಲಾನವರ, ಕಾಂತಪ್ಪ ಅಣ್ಣಿಗೇರಿ, ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.