ಹುಬ್ಬಳ್ಳಿ: ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ– ಬ್ಯಾಂಕ್ಗಳ ಕ್ಷೇಮಾಭಿವೃದ್ಧಿ ಮಹಾಮಂಡಳ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ– ಬ್ಯಾಂಕ್ಗಳ ಕ್ಷೇಮಾಭಿವೃದ್ಧಿ ಸಂಘಗಳ ಎಲ್ಲ ವರ್ಗದ ನೌಕರರಿಗೆ ಸೇವಾ ಭದ್ರತೆ, ವೇತನ ಶ್ರೇಣಿ ಹಾಗೂ ಪಿಂಚಣಿ ಸೌಲಭ್ಯ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇದಕ್ಕೆ ಸಂಬಂಧಿಸಿದಂತೆ ಅಧ್ಯಯನ ಸಮಿತಿ ನೀಡಿದ ವರದಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಸಂಘಗಳು ಆರಂಭವಾಗಿ 125 ವರ್ಷಗಳು ಕಳೆದರೂ ನೌಕರರಿಗೆ ಸೇವಾ ಭದ್ರತೆಯೇ ಇಲ್ಲದಾಗಿದೆ. ಯಾವುದೇ ಸೌಲಭ್ಯಗಳಿಲ್ಲದೆ ನಿವೃತ್ತಿ ಹೊಂದಬೇಕಾದ ಪರಿಸ್ಥಿತಿ ಇದೆ. ರೈತರ ಅಭಿವೃದ್ಧಿಗಾಗಿ ಹಗಲು ರಾತ್ರಿ ದುಡಿಯುತ್ತಿರುವ ನೌಕರರನ್ನು ನಿರ್ಲಕ್ಷಿಸಲಾಗಿದೆ. ಸಚಿವರು, ಇಲಾಖೆಯ ಹಿರಿಯ ಅಧಿಕಾರಿಗಳನ್ನು ಹಲವು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದರೂ ಪ್ರಯೋಜನಾ ಆಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಬೇಡಿಕೆ ಈಡೇರದಿದ್ದರೆ ಈ ತಿಂಗಳ ಅಂತ್ಯದಲ್ಲಿ ಕೆಲಸಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.