ADVERTISEMENT

ಧಾರವಾಡ: 3ನೇ ಅಲೆ ಎದುರಿಸಲು ಮುನ್ನೆಚ್ಚರಿಕೆ ಅಗತ್ಯ

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 15:19 IST
Last Updated 23 ಜೂನ್ 2021, 15:19 IST
ಧಾರವಾಡ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಜಗದೀಶ ಶೆಟ್ಟರ್ ಮಾತನಾಡಿದರು. ಪ್ರಸಾದ ಅಬ್ಬಯ್ಯ, ನಿತೇಶ್ ಕೆ. ಪಾಟೀಲ, ಶಶಿಕಲಾ ಜೊಲ್ಲೆ ಹಾಗೂ ಇತರರು ಇದ್ದಾರೆ.
ಧಾರವಾಡ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಜಗದೀಶ ಶೆಟ್ಟರ್ ಮಾತನಾಡಿದರು. ಪ್ರಸಾದ ಅಬ್ಬಯ್ಯ, ನಿತೇಶ್ ಕೆ. ಪಾಟೀಲ, ಶಶಿಕಲಾ ಜೊಲ್ಲೆ ಹಾಗೂ ಇತರರು ಇದ್ದಾರೆ.   

ಧಾರವಾಡ: ‘ಕೋವಿಡ್ 3ನೇ ಅಲೆ ಬರಬಾರದು ಎನ್ನುವುದು ಎಲ್ಲರ ಆಶಯ. ಆದರೆ ಬಂದಲ್ಲಿ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ತೊಂದರೆ ಆಗುತ್ತದೆ ಎನ್ನಲಾಗಿದೆ. ವಯಸ್ಕರು ಮಾಸ್ಕ್ ಹಾಕಿಕೊಂಡು ಮುಂಜಾಗ್ರತೆ ವಹಿಸುತ್ತಾರೆ. ಆದರೆ ಈ ಕುರಿತು ಸಣ್ಣ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕಾದ್ದು ಬಹಳಾ ಮುಖ್ಯ. ಪ್ರತಿ ಹಂತದಲ್ಲಿ ಕೊರೊನಾ ಮುಂಜಾಗ್ರತಾ ಸಭೆ ನಡೆಸಲಾಗಿದೆ. ಇದೇ ಮಾದರಿಯಲ್ಲಿ ಸಮರೋಪಾದಿಯಲ್ಲಿ ಕಾರ್ಯ ಮುಂದುವರಿಸಬೇಕಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಅಧಿಕಾರಿಗಳು ಪಟ್ಟಿ ಮಾಡಿದ್ದಾರೆ. ಅಂಥ ಮಕ್ಕಳ ಬಗ್ಗೆ ಹೆಚ್ಚನ ಕಾಳಜಿ ವಹಿಸಬೇಕು’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ‘ಕೋವಿಡ್ ಸಂಭಾವ್ಯ ಮೂರನೇ ಅಲೆ ತಡೆ ಮತ್ತು ನಿರ್ವಹಣೆಗಾಗಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಕ್ಕಳ ಆರೋಗ್ಯ ರಕ್ಷಣೆಗೆ ತ್ವರಿತ ಚಿಕಿತ್ಸೆಗಾಗಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಹಾಗೂ ಆಸ್ಪತ್ರೆಗಳಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ವಾರ್ಡುಗಳನ್ನು ಸ್ಥಾಪಿಸಲು ತುರ್ತು ಕ್ರಮಕೈಗೊಳ್ಳಬೇಕು. ಅಗತ್ಯ ಮಾನವ ಸಂಪನ್ಮೂಲ ಹಾಗೂ ವೈದ್ಯಕೀಯ ಉಪಕರಣಗಳ ಸೌಕರ್ಯ ಸಿದ್ಧವಿರಬೇಕು’ ಎಂದರು.

ADVERTISEMENT

‘ಸಂಭಾವ್ಯ 3ನೇ ಅಲೆಯ ತಡೆ ಮತ್ತು ನಿರ್ವಹಣೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯವಾಗಿದೆ.
ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿಮಕ್ಕಳ ತಜ್ಞರು ಸಮನ್ವಯದಿಂದ ಈ ಕಾರ್ಯ ಕೈಗೊಳ್ಳಲು ಸಹಕಾರ ನೀಡಬೇಕು. ಈಗಾಗಲೇ ಹಲವು ಖಾಸಗಿ ಆಸ್ಪತ್ರೆಗಳು ಮಕ್ಕಳಿಗೆ ಉಚಿತ ತಪಾಸಣೆ ಮಾಡಲು ಮುಂದೆ ಬಂದಿದ್ದಾರೆ. ಅನೇಕ ಸ್ವಯಂ ಸೇವಾ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ದಾನಿಗಳು ಕೂಡ ಈ ಕಾರ್ಯದಲ್ಲಿ ಕೈಜೋಡಿಸಲು ಸ್ವಯಂಪ್ರೇರಣೆಯಿಂದ ಮುಂದೆ ಬಂದಿದ್ದಾರೆ.ಇಲಾಖೆಯ ಅಧಿಕಾರಿಗಳು ಹೆಚ್ಚು ಮುತುವರ್ಜಿಯಿಂದ ಈ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸೆಗೆ ಪ್ರತ್ಯೇಕ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದರು.

‘ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ಮಕ್ಕಳ ಕಾಳಜಿ ಕೇಂದ್ರ ತೆರೆಯಬೇಕು. ಅಲ್ಲಿ ಮಕ್ಕಳಿಗೆ ಪೂರಕ ವಾತಾವರಣ ಸೃಷ್ಟಿಸಬೇಕು. ಸ್ಥಳೀಯ ಶಾಸಕರ ನೆರವಿನೊಂದಿಗೆ ಆಟಿಕೆಗಳ ಸಾಮಗ್ರಿ ಪೂರೈಸಲು ಸಲಹೆ ನೀಡಿದರು.

ಅಲ್ಲದೇ, ಸ್ಥಳೀಯ ಸಂಘ-ಸಂಸ್ಥೆಗಳ ಸಹೋಗದಲ್ಲಿ ಮಕ್ಕಳ ಕಾಳಜಿ ಕೇಂದ್ರಗಳಿಗೆ ಅಗತ್ಯವಿರುವ ಹಾಸಿಗೆ, ವೆಂಟಿಲೇಟರ್ ಪೂರೈಸುವ ಕೆಲಸಕ್ಕೆ ಆದ್ಯತೆ ನೀಡಬೇಕು. ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದರೆ, ನಿರ್ಧಾಕ್ಷಿಣ್ಯ ಕ್ರಮ ಜರುಗಿಸಬೇಕು’ ಎಂದುಜಿಲ್ಲಾಧಿಕಾರಿಗೆ ಸೂಚಿಸಿದರು.

ಶಾಸಕರಾದ ಅಮೃತ ದೇಸಾಯಿ, ಪ್ರಸಾದ ಅಬ್ಬಯ್ಯ, ಕುಸುಮಾವತಿ ಶಿವಳ್ಳಿ, ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ರಾಜ್ಯ ರೇಷ್ಮ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಜಿಲ್ಲಾಧಿಕಾರಿ ನಿತಶ್ ಕೆ. ಪಾಟೀಲ. ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಬಿ.ಸುಶೀಲಾ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಅಶೋಕ ಯರಗಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.