ADVERTISEMENT

ಆಡಳಿತಾಧಿಕಾರಿ ನೇಮಿಸಲು ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2020, 16:07 IST
Last Updated 2 ನವೆಂಬರ್ 2020, 16:07 IST
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನೌಕರರ ಸಹಕಾರಿ ಪತ್ತಿನ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಬೇಕು ಎಂದು ಮಜ್ದೂರ್‌ ಸಂಘದ ಸದಸ್ಯರು ಹುಬ್ಬಳ್ಳಿಯಲ್ಲಿ ಸೋಮವಾರ ಆಗ್ರಹಿಸಿದರು
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನೌಕರರ ಸಹಕಾರಿ ಪತ್ತಿನ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಬೇಕು ಎಂದು ಮಜ್ದೂರ್‌ ಸಂಘದ ಸದಸ್ಯರು ಹುಬ್ಬಳ್ಳಿಯಲ್ಲಿ ಸೋಮವಾರ ಆಗ್ರಹಿಸಿದರು   

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನೌಕರರ ಸಹಕಾರಿ ಪತ್ತಿನ ಸಂಘದ ಚುನಾವಣೆಯಲ್ಲಿ ಅಕ್ರಮದ ವಾಸನೆ ಕಂಡುಬಂದಿದ್ದು, ಸೂಪರ್‌ ಸೀಡ್‌ ಮಾಡಿ ಆಡಳಿತಾಧಿಕಾರಿಗಳನ್ನು ನೇಮಿಸಬೇಕು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್‌ ಸಂಘದ ಸದಸ್ಯರು ಆಗ್ರಹಿಸಿದರು.

ಸೋಮವಾರ ನಗರದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸದಸ್ಯರು ‘ಲ್ಯಾಮಿಂಗ್ಟನ್‌ ಶಾಲೆಯಲ್ಲಿ ನ. 11ರಂದು ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ. ಇದರ ಪ್ರಕಾರ ಒಟ್ಟು ಸದಸ್ಯರ ಸಂಖ್ಯೆ 4,992 ಇದ್ದು, ಉದ್ದೇಶಪೂರ್ವಕವಾಗಿ 2,302 ಜನ ಸದಸ್ಯರನ್ನು ಅನರ್ಹಗೊಳಿಸಲಾಗಿದೆ. ತಮಗೆ ಬೇಕಾದವರ ಸದಸ್ಯರ ಪಟ್ಟಿ ಬಿಡುಗಡೆ ಮಾಡಿ ಅಕ್ರಮವಾಗಿ ಚುನಾವಣೆ ನಡೆಸುವ ಸಂಚು ನಡೆಯುತ್ತಿದೆ’ ಎಂದು ಆರೋಪಿಸಿದರು. ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಸಂಘದ ಎಲ್ಲ ಸದಸ್ಯರಿಗೆ ಮತದಾನದ ಹಕ್ಕು ಕೊಡಬೇಕು, ಈಗಿನ ಸಮಸ್ಯೆ ಪರಿಹಾರವಾಗುವ ತನಕ ಆಡಳಿತಾಧಿಕಾರಿಯನ್ನು ನೇಮಿಸಬೇಕು, ಅಕ್ರಮಕ್ಕೆ ಅವಕಾಶ ಕೊಡದೆ ನ್ಯಾಯಯುತ ಚುನಾವಣೆ ನಡೆಸಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಸಂಘದ ಪ್ರಮುಖರಾದ ಮಹೇಶ ರೋಖಡೆ, ಹನಮಂತಪ್ಪ ಇಟಗಿ, ಈಶಪ್ಪ ಕಪ್ಪತ್ತನವರ, ವೀರಭದ್ರಯ್ಯ ಹಿರೇಮಠ, ಬಸವರಾಜ ಬಂಡಿವಡ್ಡರ, ಸಿದ್ದರಾಮ, ಮುತ್ತಣ್ಣ ಬಂಡಿವಡ್ಡರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.