ADVERTISEMENT

ಹಾಸ್ಟೆಲ್‌ ಸೀಟು ಹಂಚಿಕೆಯಲ್ಲಿ ಅಕ್ರಮ!

ಎಸ್‍ಎಫ್‍ಐ ಆರೋಪ: ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2023, 16:09 IST
Last Updated 14 ಡಿಸೆಂಬರ್ 2023, 16:09 IST
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಎಸ್‍ಎಫ್‍ಐ ಸಂಘಟನೆಯವರು  ಪ್ರತಿಭಟನೆ ನಡೆಸಿದರು
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಎಸ್‍ಎಫ್‍ಐ ಸಂಘಟನೆಯವರು  ಪ್ರತಿಭಟನೆ ನಡೆಸಿದರು   

ಧಾರವಾಡ: ಹಿಂದುಳಿದ ವರ್ಗಗಳ (ಬಿಸಿಎಂ) ಹಾಸ್ಟೆಲ್‌ಗಳಿಗೆ ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೂ  ಸೀಟು ನೀಡಬೇಕು, ಹಾಸ್ಟೆಲ್‌ ಸೀಟು ಹಂಚಿಕೆಯಲ್ಲಿ ಅಕ್ರಮ ನಡೆಯುತ್ತಿದ್ದು, ಅದನ್ನು ಸರಿಪಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ಜಿಲ್ಲಾ ಘಟಕದವರು ಗುರುವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಧಾರವಾಡಕ್ಕೆ ವಿದ್ಯಾಭ್ಯಾಸಕ್ಕಾಗಿ ವಿವಿಧ  ಜಿಲ್ಲೆಗಳಿಂದ ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ಬರುತ್ತಾರೆ. ಆದರೆ ಇಲ್ಲಿ ಸರ್ಕಾರಿ ಹಾಸ್ಟೇಲ್‌ಗಳ ಕೊರತೆ ಇದೆ. ಹಾಸ್ಟೆಲ್‌ನಲ್ಲಿ ಹಲವು ವಿದ್ಯಾರ್ಥಿಗಳಿಗೆ ಸೀಟು ಸಿಗುವುದಿಲ್ಲ. ಈಚೆಗೆ ನಡೆದ ಅಲ್ಪಸಂಖ್ಯಾತ ಮತ್ತು ಬಿಸಿಎಂ ಹಾಸ್ಟೆಲ್‌ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಪ್ರತಿಭಟನಾಕಾರರು  ಆರೋಪಿಸಿದರು.

ADVERTISEMENT

ಹಾಸ್ಟೆಲ್‌ ಸೀಟು ಸಿಗದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು  ಸೂಚನೆ ನೀಡಬೇಕು. ವಸತಿ ನಿಲಯಗಳಲ್ಲಿ ಪಾರದರ್ಶಕವಾಗಿ ಸೀಟು ಹಂಚಿಕೆ ಮಾಡಬೇಕು. ಈ ಬಗ್ಗೆ  ಜಿಲ್ಲಾಧಿಕಾರಿಯವರು ನಿಗಾವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಫೆಡರೇಷನ್‌ನ ರಾಜ್ಯ ಘಟಕದ ಅಧ್ಯಕ್ಷ ಅಮರೇಶ ಕಡಗದ, ಬಸವರಾಜ ಭೋವಿ, ನಾಗರಾಜ, ಬಸವರಾಜ .ಎಸ್.ಜಯಸೂರ್ಯ, ಭೂಮಿಕಾ, ಸ್ವಾತಿ, ಪವಿತ್ರಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.