ಹುಬ್ಬಳ್ಳಿ: ‘ರೈಲ್ವೆ ಇಲಾಖೆಯು ಅತ್ಯಾಧುನಿಕ ರಕ್ಷಣಾ ಉಪಕರಣಗಳನ್ನು ಅಳವಡಿಸಿ, ಶೀಘ್ರ ಹಾಗೂ ಸುರಕ್ಷಿತ ಕಾರ್ಯ ನಿರ್ವಹಣೆಗೆ ಕ್ರಮ ಕೈಗೊಳ್ಳುತ್ತಿದೆ’ ಎಂದು ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥೂರ್ ಹೇಳಿದರು.
ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗೀಯ ಕಚೇರಿಯಲ್ಲಿ ಶನಿವಾರ ನಡೆದ ನವೀಕೃತ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ನಿರ್ವಹಣೆ ಮತ್ತು ನಿಯಂತ್ರಣ ಕೇಂದ್ರದ (ಡಿಜಿಟಲ್ ಸಿ.ಸಿ ಕ್ಯಾಮೆರಾ ಕಣ್ಗಾವಲು ಪ್ಯಾನಲ್) ಉದ್ಘಾಟನೆ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
‘ಆದಾಯ ಹೆಚ್ಚಿಸುವ ಜತೆಗೆ, ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಜತೆಗೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು’ ಎಂದು ಸಲಹೆ ನೀಡಿದರು.
ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಬೇಲಾ ಮೀನಾ ಮಾತನಾಡಿ, ‘ಇಲಾಖೆಯ ದಕ್ಷ ಕಾರ್ಯ ನಿರ್ವಹಣೆಯಲ್ಲಿ ಅಧಿಕಾರಿಗಳ ಪಾತ್ರ ಮಹತ್ವದಾಗಿದೆ. ಉನ್ನತಮಟ್ಟದ ಕಾರ್ಯಕ್ಷಮತೆ ಕಾಯ್ದುಕೊಳ್ಳಬೇಕು’ ಎಂದು ಕೋರಿದರು.
ಸಭೆಯಲ್ಲಿ ವಿವಿಧ ವಿಭಾಗಗಳ ಅಧಿಕಾರಿಗಳು ಪ್ರಗತಿ ವರದಿ ಮಂಡಿಸಿದರು. ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕ ಟಿ.ಬಿ.ಭೂಷಣ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.