ADVERTISEMENT

ಮಳೆ ಹಾನಿ: ಕೇಂದ್ರ ಸ್ಥಾನ ತೊರೆಯದಂತೆ ಅಧಿಕಾರಿಗಳಿಗೆ ಸಚಿವ ಲಾಡ್ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2025, 16:03 IST
Last Updated 16 ಜೂನ್ 2025, 16:03 IST
ಧಾರವಾಡದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸಚಿವ ಸಂತೋಷ ಲಾಡ್ ಮಾತನಾಡಿದರು
ಧಾರವಾಡದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸಚಿವ ಸಂತೋಷ ಲಾಡ್ ಮಾತನಾಡಿದರು   

ಧಾರವಾಡ: ಜಿಲ್ಲೆಯಲ್ಗಿ ಮಳೆಯಾಗುತ್ಲಿದೆ. ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿದ್ದು ಜನರಿಗೆ ಸ್ಪಂದಿಸಬೇಕು. ನಿರ್ಲಕ್ಷ್ಯ ವಹಿಸಿದರೆ, ಜೀವ ಹಾನಿಯಾದರೆ ಆಯಾ ಅಧಿಕಾರಿಯನ್ನು ಹೊಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಮಳೆ ಹಾನಿ, ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ಸಭೆಯಲ್ಲಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಮಸ್ಯೆಗಳಿದ್ದರೆ, ಸ್ಥಳ ಪರಿಶೀಲನೆ ನಡೆಸಬೇಕು. ಸಮಸ್ಯೆ ಪರಿಹರಿಸಬೇಕು. ಮಳೆಗಾಲ ಮುಗಿಯುವವರೆಗೂ ಕೇಂದ್ರ ಸ್ಥಾನ ತೊರೆಯಬಾರದು. 24X7 ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ADVERTISEMENT

ಜಿಲ್ಲೆಯಲ್ಲಿ ಶೇ 67 ಮುಂಗಾರು ಬಿತ್ತನೆಯಾಗಿದೆ. ನವಲಗುಂದದಲ್ಲಿ ಶೇ 75 ಬಿತ್ತನೆಯಾಗಿದ್ದು, ಬೆಣ್ಣಿ ಹಳ್ಳದ ಪಕ್ಕದ ಹೊಲಗಳಲ್ಲಿ ಪ್ರವಾಹದಿಂದ ಬೆಳೆ ಹಾನಿಯಾಗಿದೆ. ಬಿತ್ತನೆ ಬೀಜ ಹಾನಿ ಪರಿಶೀಲಿಸಿ ಹಾಗೂ ರೈತ ಮುಖಂಡರೊಂದಿಗೆ ಚರ್ಚಿಸಿ ಮತ್ತೆ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣೆಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರಿಗೆ ತಿಳಿಸಿದರು. 

ಧಾರವಾಡ 32, ಹುಬ್ಬಳ್ಳಿ, 11, ಕಲಘಟಗಿ 18, ಕುಂದಗೋಳ 29 ನವಲಗುಂದ 23 ಸಹಿತ ಜಿಲ್ಲೆಯಲ್ಲಿ 113 ರಸ್ತೆಗಳು ಮಳೆಯಿಂದ ಹಾಳಾಗಿವೆ. ಕೆಲವೊಂದು ಹಳ್ಳಿಗಳ ಮಾರ್ಗವೂ ಸ್ಥಗಿತವಾಗಿದೆ. ಬಸ್ಸುಗಳ ಸಂಚಾರ ನಿಂತಿರುವುದರಿಂದ ಅದನ್ನು ತುರ್ತಾಗಿ ಸರಿಪಡಿಸಬೇಕು ಎಂದು ಲೋಕೋಪಯೋಗಿ ಅಧಿಕಾರಿಗಳಿಗೆ ತಿಳಿಸಿದರು. 

ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಹಳ್ಳಿಗಳ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು. ಜನರೊಂದಿಗೆ ಇದ್ದು ಅವರ ಸಂಕಷ್ಟಗಳನ್ನು ಆಲಿಸಬೇಕು ಎಂದು  ತಿಳಿಸಿದರು.

ಶಾಸಕ ಎನ್.ಎಚ್.ಕೋನರೆಡ್ಡಿ ಮಾತನಾಡಿ, ನವಲಗುಂದ ತಾಲ್ಲೂಕಿನಲ್ಲಿ ಹೆಚ್ಚು ಮಳೆಯಾಗಿದ್ದು, ಬೇರೆ ಜಿಲ್ಲೆಗಳಿಂದ, ತಾಲ್ಲೂಕುಗಳಿಂದ ನೀರು ಹರಿದು ಬರುತ್ತಿರುವುದರಿಂದ ಪ್ರವಾಹವು ಉಂಟಾಗುತ್ತಿದೆ. ಇದರಿಂದ ರಸ್ತೆಗಳು, ಸೇತುವೆಗಳು, ಮನೆಗಳು, ಬೆಳೆ ಹಾನಿ ಆಗುತ್ತಿರುವುದರಿಂದ ಅದನ್ನು ಸರಿಪಡಿಸುವ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ದಿವ್ಯಾ ಪ್ರಭು ಮಾತನಾಡಿ, ಜಿಲ್ಲೆಯಲ್ಲಿ ಭಾರಿ ಮಳೆಯಾದ ಕಾರಣ ಪ್ರತಿಯೊಬ್ಬ ಅಧಿಕಾರಿಯು ಗ್ರಾಮಗಳಿಗೆ ಭೇಟಿ ನೀಡಿ, ಅಲ್ಲಿ ಇರುವ ಸಮಸ್ಯೆಗಳ ಬಗ್ಗೆ ಊರಿನ ಮುಖಂಡರೊಂದಿಗೆ ಚರ್ಚಿಸಿ, ಹಾಳಾಗಿರುವ ರಸ್ತೆಗಳ ಬಗ್ಗೆ ಮತ್ತು ಶಾಲೆಗಳ ಬಗ್ಗೆ, ಕುಡಿಯುವ ನೀರಿಗಾಗಿ ಆದ ತೊದರೆಗಳ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಯೊಂದಿಗೆ ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್, ಪ್ರೊಬೇಷನರಿ ಐಎಎಸ್ ಅಧಿಕಾರಿ ರೀತಿಕಾ ವರ್ಮಾ, ಡಿಸಿಪಿ ಮಹಾನಿಂಗ್ ನಂದಗಾಂವಿ ಇದ್ದರು.

ಹುಬ್ಬಳ್ಳಿ–ಧಾರವಾಡ ಪಾಲಿಕೆಯಲ್ಲಿ ಎರಡು ಸಾವಿರ ಪೌರಕಾರ್ಮಿಕರು ಇದ್ದಾರೆ. ಒಬ್ಬರಿಗೆ ಐದು ಮೀಟರ್ ರಸ್ತೆ ಸ್ವಚ್ಛತೆ ವಹಿಸಿದರೆ ನಿತ್ಯ 10 ಕಿ.ಮೀ  ಸ್ವಚ್ಛಗೊಳಿಸಬಹುದು. ನಗರ ಸ್ವಚ್ಛತೆ ನಿಟ್ಟಿನಲ್ಲಿ ‘ರೋಡ್ ಮ್ಯಾಪ್’ ಸಿದ್ದಪಡಿಸಬೇಕು
ಸಂತೋಷ ಲಾಡ್, ಸಚಿವ
ಡಿಡಿಪಿಐ ವಿರುದ್ಧ ಗರಂ
ಜಿಲ್ಲೆಯಲ್ಲಿ ಎಷ್ಟು ಶಾಲಾ ಕೊಠಡಿಗಳು ಸೋರುತ್ತಿವೆ ಎಂಬ ಮಾಹಿತಿ ಕೇಳಿದರೆ ನೀವು ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಸಚಿವ ಲಾಡ್‌ ಅವರು ಡಿಡಿಪಿಐ ಎಸ್.ಎಸ್.ಕೆಳದಿಮಠ ಅವರನ್ನು ತರಾಟೆಗೆ ತೆಗೆದುಕೊಂಡರು. ಶಾಲಾ ಗೋಡೆ ಚಾವಣಿ ಬಿದ್ದು ಅನಾಹುತ ಸಂಭವಿಸಿದರೆ ನೀವೇ ಹೊಣೆಗಾರರಾಗುತ್ತಿರಿ. ಶಿಥಿಲಗೊಂಡ ಹಾಗೂ ಸೋರುತ್ತಿರುವ ಅಂಗನವಾಡಿ ಹಾಗೂ ಶಾಲಾ ಕೊಠಡಿಗಳಲ್ಲಿ ತರಗತಿ ನಡೆಸಬಾರದು. ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.