ಹುಬ್ಬಳ್ಳಿ: ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ರಭಸ ತಗ್ಗಿದ್ದು, ಮಳೆಯ ಅವಾಂತರಗಳು ವರದಿಯಾಗಿವೆ. ಸತತ 2–3 ದಿನಗಳಿಂದ ಸುರಿದ ಮಳೆಯಿಂದಾಗಿ ಶನಿವಾರ ರಾತ್ರಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಡೊಂಕಮಡು ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದು, ಬಾಲಕಿಯೊಬ್ಬಳು ಮೃತಪಟ್ಟಿದ್ದಾರೆ. ಮತ್ತೊಬ್ಬ ಬಾಲಕಿ ಗಾಯಗೊಂಡಿದ್ದಾರೆ.
ಗ್ರಾಮದ ಮರೆಮ್ಮ ಹುಲಗಪ್ಪ ಬಿಜ್ಜೂರ (11) ಮೃತಪಟ್ಟಿದ್ದು, ಇನ್ನೊಬ್ಬ ಬಾಲಕಿ ರೇಖಾ ಲೊಟಗೇರಿ ತೀವ್ರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಸುರಿದ ಮಳೆಗೆ 303 ಭಾಗಶಃ ಮತ್ತು 3 ಮನೆಗಳು ಪೂರ್ಣ ಪ್ರಮಾಣದಲ್ಲಿ ಕುಸಿದು
ಬಿದ್ದಿವೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿಯಲ್ಲಿ ಎರಡು ಹಾಗೂ ಅಯ್ಯನಹಳ್ಳಿ ಗ್ರಾಮದಲ್ಲಿ ಒಂದು ಮನೆಗೆ ಹಾನಿಯಾಗಿದೆ. ತಾಲ್ಲೂಕಿನಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಗೆ ಅಂದಾಜು 107 ಮನೆಗಳು ಕುಸಿದಿವೆ. ತಾಲ್ಲೂಕಿನ ಜಕ್ಕೇರಾಳ ಗ್ರಾಮದಲ್ಲಿ ನಿಂಗಪ್ಪ ಇಂಗಳಗೇರಿ ಎನ್ನುವವರ ಮನೆ ಗೋಡೆ ಕುಸಿದು ಮನೆಯ ಪಕ್ಕದಲ್ಲಿ ಕಟ್ಟಿದ್ದ ಮೇಕೆಯೊಂದು ಮೃತಪಟ್ಟಿದೆ.
ಬಳ್ಳಾರಿ, ಬೆಳಗಾವಿ, ಧಾರವಾಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.