ADVERTISEMENT

ಜ 25ರಿಂದ ರಾಯಣ್ಣ ಸಾಂಸ್ಕೃತಿಕ ಉತ್ಸವ

14 ಸಾಧಕರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಮೂರು ದಿನ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2018, 13:22 IST
Last Updated 31 ಡಿಸೆಂಬರ್ 2018, 13:22 IST

ಹುಬ್ಬಳ್ಳಿ: ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆ ಅಂಗವಾಗಿ ಜ. 25ರಿಂದ ಮೂರು ದಿನ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಸಂಗೊಳ್ಳಿ ರಾಯಣ್ಣ ಸಾಂಸ್ಕೃತಿಕ ಉತ್ಸವ ನಡೆಯಲಿದೆ.

ಮನಸೂರ ರೇವಣಸಿದ್ಧೇಶ್ವರ ಮಹಾಮಠದ ಬಸವರಾಜ ದೇವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಮೊದಲ ದಿನ ಮಠದ ಆವರಣದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. 26ರಂದು ರಾಯಣ್ಣನ ಬದುಕು–ಹೋರಾಟ ಕುರಿತು ವಿಚಾರ ಸಂಕಿರಣ, ಕವಿಗೋಷ್ಠಿ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ’ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಧಾರವಾಡದ ಕನಕ ಕಲಾ ಸಾಂಸ್ಕೃತಿಕ ಕೇಂದ್ರದ ಸಹಯೋಗದಲ್ಲಿ ಕಾರ್ಯಕ್ರಮ ಜರುಗಲಿದೆ. ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಗೋಟಗೋಡಿ ಜಾನಪದ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಚಂದ್ರಪ್ಪ ಸೊಬಟೆ ಅಧ್ಯಕ್ಷತೆ ವಹಿಸುವರು. ಕೊನೆಯ ದಿನ ಬೆಳಿಗ್ಗೆ 9 ಗಂಟೆಗೆ ಕಲಾಭವನದಿಂದ ವಿದ್ಯಾವರ್ಧಕ ಸಂಘದ ತನಕ ರಾಯಣ್ಣನ ಭಾವಚಿತ್ರದ ಮೆರವಣಿಗೆ ಜರುಗಲಿದೆ. ಬಳಿಕ ಯುವ ಸಮಾವೇಶ, ರಾಯಣ್ಣ ಪ್ರಶಸ್ತಿ ಪ್ರದಾನ ನಡೆಯಲಿದೆ.

ADVERTISEMENT

‘ಕೊನೆಯ ದಿನದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸುವರು. ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಸಚಿವ ಸಿ.ಎಸ್‌. ಶಿವಳ್ಳಿ ಪಾಲ್ಗೊಳ್ಳಲಿದ್ದಾರೆ’ ಎಂದು ಅವರು ತಿಳಿಸಿದರು.

ರಾಜಕಾರಣಿಗಳ ವಿರುದ್ಧ ಅಸಮಾಧಾನ: ಈಗಿನ ರಾಜಕಾರಣಿಗಳು ಓಟಿನ ಆಸೆಗಾಗಿ ಸಮಾಜವನ್ನು ಬಳಸಿಕೊಳ್ಳುತ್ತಿದ್ದು, ಯಾರೂ ಸಮಾಜದ ಏಳಿಗೆಗೆ ಶ್ರಮಿಸುತ್ತಿಲ್ಲ ಎಂದು ಬಸವರಾಜ ದೇವರು ಅಸಮಾಧಾನ ವ್ಯಕ್ತಪಡಿಸಿದರು.

‘ದೇಶಕ್ಕಾಗಿ ಹೋರಾಡಿದ ಸಂಗೊಳ್ಳಿ ರಾಯಣ್ಣನನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಡೆಗಣಿಸಿವೆ. ರಾಯಣ್ಣನನ್ನು ಯಾವುದೊ ಒಂದು ಸಮಾಜಕ್ಕೆ ಸೀಮಿತಗೊಳಿಸಬಾರದು. ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ರಾಯಣ್ಣನ ಹೆಸರಿಡಬೇಕು. ಧಾರವಾಡಕ್ಕೂ ರಾಯಣ್ಣನಿಗೂ ಅಪಾರವಾದ ನಂಟಿದೆ. ಆದ್ದರಿಂದ ಕೆ.ಸಿ. ಉದ್ಯಾನದಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.