ಹುಬ್ಬಳ್ಳಿ: ‘ರಾಜ್ಯದಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ ಕುರಿತು ಬಿಜೆಪಿ ನಾಯಕರೊಂದಿಗೆ ಬಹಿರಂಗ ಚರ್ಚೆಗೆ ನಾನು ಸಿದ್ಧ. ಅವರು ಎಲ್ಲಿ ವೇದಿಕೆ ಸಿದ್ಧಪಡಿಸುತ್ತಾರೋ ಅಲ್ಲಿಗೆ ಬರುವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಚಿವ ಡಾ. ಸುಧಾಕರ್ ಬದಲು ಈ ರಾಜ್ಯದ ಬಿಜೆಪಿ ಅಧ್ಯಕ್ಷ ನಳಿನಕುಮಾರ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಜೊತೆ ಚರ್ಚಿಸಲು ಸದಾ ಸಿದ್ಧನಿದ್ದೇನೆ’ ಎಂದರು.
‘ಪೊಲೀಸ್, ಶಿಕ್ಷಣ, ಆರೋಗ್ಯ, ಕಂದಾಯ ಸೇರಿದಂತೆ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ತಾಂಡವಾಡುತ್ತಿದೆ. ಪಿಎಸ್ಐ, ಎಫ್ಡಿಐ ಹುದ್ದೆ ನೇಮಕಾತಿ ಹಗರಣ ಸೇರಿದಂತೆ ಹಲವು ಹಗರಣಗಳು ರಾಜ್ಯ ಸರ್ಕಾರವನ್ನು ಸುತ್ತಿಕೊಂಡಿವೆ. ಇದರಿಂದಾಗಿ ಜನ ಬೇಸತ್ತಿದ್ದು, ಬದಲಾವಣೆ ಬಯಸುತ್ತಿದ್ದಾರೆ. ಕಾಂಗ್ರೆಸ್ ಪ್ರತಿಭಟನೆಗೆ ದೊಡ್ಡ ಸಂಖ್ಯೆಯಲ್ಲಿ ಜನ ಸೇರುತ್ತಿರುವುದೇ ಇದಕ್ಕೆ ಸಾಕ್ಷಿ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.