ಹುಬ್ಬಳ್ಳಿ: ‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ (ಆರ್ಪಿಐ) ರಾಜ್ಯ ಮಟ್ಟದ ಸಮ್ಮೇಳನವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಆ.26ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಾ.ಎಂ. ವೆಂಕಟಸ್ವಾಮಿ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಂದು ಲಕ್ಷ ಕಾರ್ಯಕರ್ತರು ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಬೆಳಗಾವಿ ವಿಭಾಗದಿಂದ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ತೆರಳಲಿದ್ದಾರೆ. ಪಕ್ಷದ ರಾಷ್ಟ್ರೀಯ ಘಟಕದ ಅಧ್ಯಕ್ಷ ರಾಮ್ದಾಸ್ ಅಠಾವಳೆ ಉದ್ಘಾಟಿಸಲಿದ್ದಾರೆ’ ಎಂದು ಹೇಳಿದರು.
‘ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪಕ್ಷ ಸಕ್ರಿಯವಾಗಿದೆ. 10 ಲಕ್ಷ ಸದಸ್ಯತ್ವ ಗುರಿ ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಅಭಿಯಾನ ನಡೆಸಲಾಗುತ್ತಿದೆ. ರಾಷ್ಟ್ರೀಯಕಾರ್ಯಕಾರಿ ಸಮಿತಿಗೆ ರಾಜ್ಯದ ಜಿ.ಸಿ. ವೆಂಕಟರಮಣಪ್ಪ ಹಾಗೂ ಎಂ. ಮುನಿರಾಜು ಅವರು ನೇಮಕವಾಗಿದ್ದಾರೆ. ಮುಂದಿನ ಬಿಬಿಎಂಪಿ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ’ ಎಂದರು.
ಬೆಳಗಾವಿ ವಿಭಾಗೀಯ ಅಧ್ಯಕ್ಷ ಶಂಕರ ಅಜಮನಿ, ಜಿಲ್ಲಾ ಘಟಕಗಳ ಅಧ್ಯಕ್ಷರಾದ ಶಾಸ್ತ್ರಿ ಹೊಸಮನಿ (ವಿಜಯಪುರ), ಡಿ. ಪ್ರಸಾದ (ಗದಗ), ಗಾಳೆಮ್ಮನವರ (ಹಾವೇರಿ), ಬೆಳಗಾವಿ ಮಹಿಳಾ ಘಟಕದ ಅಧ್ಯಕ್ಷೆ ದಿಲ್ಶಾದ್ ಬೇಗಂ ತಹಶೀಲ್ದಾರ್, ರೇಣುಕಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.