ADVERTISEMENT

ಮೀಸಲಾತಿ ಹೋರಾಟ: 7ರಂದು ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 11:59 IST
Last Updated 3 ನವೆಂಬರ್ 2020, 11:59 IST

ಹುಬ್ಬಳ್ಳಿ: ಕುರುಬ ಸಮಾಜದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಬಗ್ಗೆ ಹೋರಾಟದ ಯೋಜನೆಗಳನ್ನು ರೂಪಿಸಲು ನ. 7ರಂದು ಬೆಳಿಗ್ಗೆ 11 ಗಂಟೆಗೆ ನಗರದ ಆರ್‌.ಎನ್‌. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಬೆಳಗಾವಿ ವಿಭಾಗ ಮಟ್ಟದ ಪೂರ್ವಭಾವಿ ಸಭೆ ನಡೆಯಲಿದೆ.

ಈ ಕುರಿತು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಗಿನೆಲೆ ಕರ್ನಾಟಕ ರಾಜ್ಯ ಕುರುಬ ಸಮಾಜದ ಎಸ್‌.ಟಿ. ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಸಿದ್ದಣ್ಣ ತೇಜಿ ‘ನಮ್ಮ ಸಮಾಜದ ಕೆಲವರಿಗೆ ಮಾತ್ರ ಎಸ್‌.ಟಿ. ಮೀಸಲಾತಿ ಸಿಕ್ಕಿದೆ, ಇನ್ನೂ ಕೆಲವರಿಗೆ ಸಿಕ್ಕಿಲ್ಲ. ಕುರುಬ ಸಮಾಜಕ್ಕೆ ಮೀಸಲಾತಿ ನೀಡುವಂತೆ ಹಲವಾರು ವರ್ಷಗಳಿಂದ ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಕಾಗಿನೆಲೆ ಪೀಠದ ಗುರುಗಳು, ನಾಲ್ಕು ಪೀಠದ ಜಗದ್ಗುರುಗಳು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಸೇರಿ ಸಭೆ ನಡೆಸಿ ಹೋರಾಟದ ಯೋಜನೆ ರೂಪಿಸುತ್ತೇವೆ’ ಎಂದರು.

‘7ರಂದು ನಡೆಯುವ ಸಭೆಯಲ್ಲಿ ಬೆಳಗಾವಿ ವಿಭಾಗ ವ್ಯಾಪ್ತಿಯ ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ ಮತ್ತು ಬೆಳಗಾವಿ ಜಿಲ್ಲೆಗಳ ತಲಾ 50 ಸಮಾಜದ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಸಚಿವ ಕೆ.ಎಸ್‌. ಈಶ್ವರಪ್ಪ, ಮಾಜಿ ಸಚಿವ ಎಚ್‌.ಎಂ. ರೇವಣ್ಣ, ಹೋರಾಟ ಸಮಿತಿ ಅಧ್ಯಕ್ಷ ಕೆ. ವಿರೂಪಾಕ್ಷಪ್ಪ ಮತ್ತು ರಾಜ್ಯ ಸಮಿತಿ ಪ್ರಮುಖರು ಭಾಗವಹಿಸಲಿದ್ದಾರೆ’ ಎಂದರು.

ADVERTISEMENT

ಸಮಿತಿಯ ರಾಜ್ಯ ಸಮಿತಿ ಉಪಾಧ್ಯಕ್ಷ ಬಸವರಾಜ ಬಸಲಿಗುಂದಿ, ಜಿಲ್ಲಾ ಸಮಿತಿ ಸದಸ್ಯ ಅಣ್ಣಪ್ಪ ಓಲೇಕಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.