ADVERTISEMENT

ರಸ್ತೆ, ಯುಜಿಡಿ ಕಾಮಗಾರಿಗೆ ಶೀಘ್ರ ಚಾಲನೆ: ಶಾಸಕ ಜಗದೀಶ ಶೆಟ್ಟರ್

ದಿಡ್ಡಿ ಓಣಿಯ ಜನಸಂಪರ್ಕ ಸಭೆಯಲ್ಲಿ ಭರವಸೆ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2021, 15:46 IST
Last Updated 31 ಡಿಸೆಂಬರ್ 2021, 15:46 IST
ಹುಬ್ಬಳ್ಳಿಯ ದಿಡ್ಡಿ ಓಣಿ ಉದ್ಯಾನವನದಲ್ಲಿ ಶುಕ್ರವಾರ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಜಗದೀಶ ಶೆಟ್ಟರ್ ಮಾತನಾಡಿದರು
ಹುಬ್ಬಳ್ಳಿಯ ದಿಡ್ಡಿ ಓಣಿ ಉದ್ಯಾನವನದಲ್ಲಿ ಶುಕ್ರವಾರ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಜಗದೀಶ ಶೆಟ್ಟರ್ ಮಾತನಾಡಿದರು   

ಹುಬ್ಬಳ್ಳಿ: ‘ನಗರ ವಿಕಾಸ ಯೋಜನೆಯಡಿ ₹3 ಕೋಟಿ ಅನುದಾನದಲ್ಲಿ ಚನ್ನಪೇಟೆ, ಅರವಿಂದ ನಗರ ಹಾಗೂ ಹಳೇ ಹುಬ್ಬಳ್ಳಿಯ ಮುಖ್ಯ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ವಾರ್ಡ್ 55ರ ವ್ಯಾಪ್ತಿಯಲ್ಲಿ ಯುಜಿಡಿ ಹಾಗೂ ಒಳಚರಂಡಿ ನಿರ್ಮಿಸಲು ₹1 ಕೋಟಿ ಮಂಜೂರಾಗಿದೆ. ಎಲ್ಲಾ ಕಾಮಗಾರಿಗಳಿಗೆ ಶೀಘ್ರ ಚಾಲನೆ ನೀಡಲಾಗುವುದು’ ಎಂದು ಶಾಸಕ ಜಗದೀಶ‌ ಶೆಟ್ಟರ್ ಹೇಳಿದರು.

ಹಳೇ ಹುಬ್ಬಳ್ಳಿಯ ದಿಡ್ಡಿ ಓಣಿ ಉದ್ಯಾನವನದಲ್ಲಿ ಶುಕ್ರವಾರ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ‘ದಾಳಿಂಬರ ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಗಾಲದ ಸಂದರ್ಭದಲ್ಲಿ ನಾಲೆಗಳು ಮತ್ತು ಚರಂಡಿಗಳು ತುಂಬಿ, ಅಲ್ಲಿನ ನೀರು ರಸ್ತೆ ಹಾಗೂ ಮನೆಗಳಿಗೆ ನುಗ್ಗುತ್ತಿತ್ತು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಯುಜಿಡಿ ಹಾಗೂ ಒಳಚರಂಡಿ ಕಾಮಗಾರಿ ಆರಂಭವಾಗುವ ಮುನ್ನವೇ, ಈ ಭಾಗದ ಸಮಸ್ಯೆಗಳ ಕುರಿತು ಸಮೀಕ್ಷೆ ಮಾಡಿ ವರದಿ ನೀಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕ್ಯಾಮೆರಾ ಅಳವಡಿಸಿ: ಹಳೇ ಹುಬ್ಬಳ್ಳಿ ಭಾಗದಲ್ಲಿ ಕಳ್ಳರ ಹಾವಳಿ ಜಾಸ್ತಿಯಾಗಿದೆ. ಹಾಗಾಗಿ, ಈ ಭಾಗದ ವೃತ್ತಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದರು. ಸಂಗೀತಾ ಕಾಟವೆ ಎಂಬುವವರ ಮರಣ ಪ್ರಮಾಣಪತ್ರ ನೀಡುವಲ್ಲಿ ಅಧಿಕಾರಿಗಳು ವಿಳಂಬ ಮಾಡಿದ್ದರ ಕುರಿತು ಅವರ ಸಂಬಂಧಿಯೊಬ್ಬರು ಸಭೆಯಲ್ಲಿ ಅಳಲು ತೋಡಿಕೊಂಡರು.

ADVERTISEMENT

ಅದಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್, ‘ಕಳ್ಳರ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಕಮಿಷನರ್ ಅವರಿಗೆ ಸೂಚಿಸುವೆ. ಕೇಂದ್ರ ಸರ್ಕಾರದ ಹಲವಾರು ಯೋಜನೆಗಳಡಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಅವಕಾಶವಿದೆ. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಚರ್ಚಿಸುವೆ’ ಎಂದು ಭರವಸೆ ನೀಡಿದರು.

ಅಧಿಕಾರಿಗಳಿಗೆ ಎಚ್ಚರಿಕೆ: ‘ಮನೆಮನೆಗೆ ತೆರಳಿ ಜನನ ಹಾಗೂ ಮರಣ ಪ್ರಮಾಣಪತ್ರ ವಿತರಿಸಲುಸರ್ಕಾರ ಯೋಚಿಸುತ್ತಿದೆ. ಆದರೆ, ಪಾಲಿಕೆ ಅಧಿಕಾರಿಗಳು ಮರಣ ಹೊಂದಿದವರ ಪಂಚನಾಮೆ ಮಾಡಲು ಅಸಡ್ಡೆ ತೋರುವುದು ಸರಿಯಲ್ಲ. ಜನರ ಕೆಲಸ ಮಾಡಿಕೊಡಲು ನಿರ್ಲಕ್ಷ್ಯ ತೋರಿದರೆ ಹೇಗೆ? ಮತ್ತೆ ಇಂತಹ ದೂರಗಳು ಬಾರದಂತೆ ಕೆಲಸ ಮಾಡಬೇಕು’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಮೊಚಿಗಾರ ಸಂಘದಿಂದ ಸಮುದಾಯ ಭವನ ನಿರ್ಮಿಸಲು ಅನುದಾನ ಒದಗಿಸಲು ಸಭೆಯಲ್ಲಿ ಮನವಿ ಸಲ್ಲಿಸಲಾಯಿತು. ಆಸಾರ ಓಣಿಯ ಶಿಕ್ಕಲಿಗರ ತಾಂಡಾದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರಿಗೆ ಜಿ+2 ಮಾದರಿಯಲ್ಲಿ ಮನೆಗಳನ್ನು ನಿರ್ಮಿಸಿ ಕೊಡುವಂತೆ ಸ್ಥಳೀಯರು ಮನವಿ ಸಲ್ಲಿಸಿದರು.

ಅಸಂಘಟಿತ ಕಾರ್ಮಿಕರಿಗೆ ಗುರುತಿನ ಚೀಟಿ ಹಾಗೂ ಈ ಶ್ರಮ ಕಾರ್ಡ್‌ಗಳನ್ನು ವಿತರಣೆ ಮಾಡಲಾಯಿತು. ಸಭೆಯಲ್ಲಿ ಕರ್ನಾಟಕ ಮಾರ್ಜಕ ನಿಯಮಿತದ ನಿರ್ದೇಶಕ ಮಲ್ಲಿಕಾರ್ಜುನ ಸಾವಕಾರ, ಪಾಲಿಕೆ ಸದಸ್ಯ ಸಂತೋಷ ಚವ್ಹಾಣ, ಬಿಜೆಪಿ ಮುಖಂಡರಾದ ಡಾ. ಪಾಂಡುರಂಗ ಪಾಟೀಲ, ಡಿ.ಕೆ. ಚವ್ಹಾಣ ಹಾಗೂ ಪಾಲಿಕೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.