
ಕಲಘಟಗಿ: ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ, ಉತ್ತಮ ಚಿಕಿತ್ಸೆ ನೀಡಬೇಕು. ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವೈದ್ಯರಿಗೆ ಸೂಚಿಸಿದರು.
ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ದಿಢೀರ್ ಭೇಟಿ ನೀಡಿದ ಸಚಿವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಆಸ್ಪತ್ರೆಯಲ್ಲಿರುವ ಆಶಾಕಿರಣ ದೃಷ್ಟಿ ಕೇಂದ್ರ, ತುರ್ತು ಚಿಕಿತ್ಸಾ ಘಟಕ, ಡಯಾಲಿಸಿಸ್ ಘಟಕ, ಶಸ್ತ್ರ ಚಿಕಿತ್ಸಾ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್ ಅವಶ್ಯಕತೆ ಇದ್ದರೆ, ನಮ್ಮ ಫೌಂಡೇಷನ್ನ ಆಂಬುಲೆನ್ಸ್ ಅನ್ನು ಬಳಸಿಕೊಳ್ಳಬೇಕು ಎಂದರು.
ಉಸಿರಾಟ ತೊಂದರೆಯಿಂದ ಬಳಲುತ್ತಿರುವ ರೋಗಿಗಳಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ವೈದ್ಯಕೀಯ ಆಮ್ಲಜನಕ ಯಂತ್ರದ ಅವಶ್ಯಕತೆ ಇದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಬಸವರಾಜ ಬಾಸೂರ ಎಂದರು.
ಆಸ್ಪತ್ರೆಗೆ ಬೇಕಾಗುವ ವಿವಿಧ ಉಪಕರಣಗಳನ್ನು ಶೀಘ್ರ ನೀಡುವುದಾಗಿ ಸಚಿವರು ಭರವಸೆ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಸತೀಶ ಹೊನಕೇರಿ, ಡಾ.ಮಧುಸೂದನ, ತಾಲ್ಲೂಕು ಆರೋಗ್ಯಧಿಕಾರಿ ಎನ್.ಬಿ ಕರ್ಲವಾಡ, ತಾಲ್ಲೂಕು ಪಂಚಾಯತಿ ಇಒ ಪಿ. ವೈ ಸಾವಂತ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಆರ್ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಮುರಳ್ಳಿ, ಸಿಪಿಐ ಶ್ರೀಶೈಲ್ ಕೌಜಲಗಿ, ಮುಖಂಡರಾದ ಬಾಳು ಖಾನಾಪುರ, ಮುಕುಂದಪ್ಪ ಅಂಚಟಗೇರಿ, ನರೇಶ ಮಲೆನಾಡು, ಬಾಳು ಖಾನಾಪುರ, ಶಂಕರ ದಾಸನಕೊಪ್ಪ, ಶಿವಲಿಂಗ ಮುಗಣ್ಣವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.