ಧಾರವಾಡ: ಶಾಲಾ ಪ್ರಾರಂಭೋತ್ಸವಕ್ಕೆ ಶಿಕ್ಷಕರು, ಸಿಬ್ಬಂದಿ ಸಿದ್ಧತೆ ಮಾಡಿಕೊಂಡಿದ್ದಾರೆ. ಮೇ 30ರಿಂದ ವಿದ್ಯಾರ್ಥಿಗಳು ಹಾಜರಾಗಲಿದ್ದು, ಸ್ವಾಗತ ನಿಟ್ಟಿನಲ್ಲಿ ಶಾಲೆಗಳಲ್ಲಿ ತಳಿರು ತೋರಣ ಕಟ್ಟಿ ಅಲಂಕರಿಸಲಾಗಿದೆ.
ಗುರುವಾರ ಶಾಲೆಗಳಲ್ಲಿ ಸ್ವಚ್ಛತೆ ಮತ್ತು ಸಿದ್ದತಾ ಕಾರ್ಯಗಳು ನಡೆದವು. ಕೊಠಡಿ, ಮೈದಾನಗಳನ್ನು ಸಜ್ಜುಗೊಳಿಸಲಾಯಿತು. ಶಿಕ್ಷಕರು, ಸಿಬ್ಭಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ವೇಳಾಪಟ್ಟಿ, ಎಸ್ಡಿಪಿ ಕ್ರಿಯಾಯೋಜನೆ ತಯಾರಿ, ಶಿಕ್ಷಕರಿಗೆ ವಿಷಯ ಹಂಚಿಕೆ ಪೂರ್ವಸಿದ್ಧತೆ ಮಾಡಿಕೊಂಡಿದ್ಧಾರೆ.
ವಿದ್ಯಾರ್ಥಿಗಳನ್ನು ಸ್ವಾಗತಿಸುವ ನಿಟ್ಟಿನಲ್ಲಿ ತಯಾರಿ ಮಾಡಿಕೊಳ್ಳಲಾಗಿದೆ. ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಜನಪ್ರತಿನಿಧಿಗಳು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
‘ಶಾಲೆ ಆರಂಭವಾಗಿದೆ ಎಲ್ಲ ವಿದ್ಯಾರ್ಥಿಗಳೂ ಶಾಲೆಗೆ ಬನ್ನಿ’, ‘ಎಲ್ಲರೂ ಮಕ್ಕಳ ಹಕ್ಕನ್ನು ರಕ್ಷಿಸಿ’, ‘ಮಕ್ಕಳನ್ನು ಶಾಲೆಗೆ ಕಳುಹಿಸಲು ಸಿದ್ಧರಾಗಿ’ ಮೊದಲಾದ ಭಿತ್ತಿಫಲಕಗಳ ಪ್ರದರ್ಶನಕ್ಕೆ ಕೆಲ ಶಾಲೆಗಳಲ್ಲಿ ವ್ಯವಸ್ಥೆ ಮಾಡಿಕೊಂಡಿದ್ದಾರೆ.
ಶಾಲೆಗಳಿಗೆ ಬಹುತೇಕ ಪಠ್ಯಪುಸ್ತಕ, ಸಮವಸ್ತ್ರ ಪೂರೈಸಲಾಗಿದೆ. ಮಕ್ಕಳಿಗೆ ಅವುಗಳನ್ನು ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೊದಲ ದಿನ ಮಕ್ಕಳಿಗೆ ಸಿಹಿ ನೀಡಲು ಸಿದ್ದತೆ ಮಾಡಿಕೊಂಡಿದ್ಧಾರೆ.
‘ಶಾಲಾ ಪ್ರಾರಂಭೋತ್ಸವ ನಿಟ್ಟಿನಲ್ಲಿ ಕಟ್ಟಡಕ್ಕೆ ಬಣ್ಣ ಬಳಿಸಿ ಶೃಂಗರಿಸಿದ್ದೇವೆ. ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ. ಮೈಸೂರುಪಾಕ್ ಸಿಹಿ ನೀಡುತ್ತೇವೆ. ಒಂದನೇ ತರಗತಿಯವರಿಗೆ ಅಕ್ಷಾರಾಭ್ಯಾಸದ ಕಾರ್ಯಕ್ರಮ ಇದೆ’ ಎಂದು ತಾಲ್ಲೂಕಿನ ಕಲ್ಲೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎನ್.ಜಿ.ಗುರುಪುತ್ರನ್ನವರ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.