ADVERTISEMENT

ಹುಬ್ಬಳ್ಳಿ: ಹೊರಟ್ಟಿಗೆ ಮಾಧ್ಯಮಿಕ ಶಿಕ್ಷಕರ ಸಂಘದ ಬೆಂಬಲ

​ಪ್ರಜಾವಾಣಿ ವಾರ್ತೆ
Published 3 ಜೂನ್ 2022, 4:58 IST
Last Updated 3 ಜೂನ್ 2022, 4:58 IST

ಹುಬ್ಬಳ್ಳಿ: ‘ಬಿಜೆಪಿ ಸರ್ಕಾರ ಶಿಕ್ಷಕ ಸ್ನೇಹಿ ಆಗಿರುವುದರಿಂದ ಈ ಬಾರಿಯ ವಿಧಾನ ಪರಿಷತ್‌ ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರಿಗೆ ಬೆಂಬಲ ಸೂಚಿಸುತ್ತೇವೆ’ ಎಂದು ಮಾಧ್ಯಮಿಕ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಂದೀಪ ಬೂದಿಹಾಳ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಷ್ಟ್ರೀಯ ಶಿಕ್ಷಣ ನೀತಿ, ಐಐಟಿ ಹಾಗೂ ಐಐಐಟಿ ಸ್ಥಾಪನೆ, 1,765 ಶಾಲಾ–ಕಾಲೇಜುಗಳಿಗೆ ಅನುದಾನ, 5 ಮತ್ತು 6ನೇ ವೇತನ ಆಯೋಗ ಜಾರಿ, ಖಾಲಿ ಹುದ್ದೆಗಳ ಭರ್ತಿ, ಮೌಲ್ಯಮಾಪಕರ ಸಂಭಾವನೆ ಹೆಚ್ಚಳದಂತಹ ಕ್ರಮಗಳನ್ನು ವಿವಿಧ ಸಂದರ್ಭಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗದ ಸಮಿತಿ ರಚನೆಗೆ ಮುಂದಾಗಿರುವುದರಿಂದ ಶಿಕ್ಷಕರಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು.

ಮಹಾವಿದ್ಯಾಲಯ ಶಿಕ್ಷಕರ ಸಂಘದ ಅಧ್ಯಕ್ಷ ರಘು ಅಕಮಂಚಿ ಮಾತನಾಡಿ, ‘2005ನೇ ಇಸವಿಯಿಂದ ಈಚೆಗೆ ಸ್ಥಾಪನೆಯಾದ ಶಿಕ್ಷಣ ಸಂಸ್ಥೆಗಳನ್ನೂ ಅನುದಾನಕ್ಕೆ ಒಳಪಡಿಸಬೇಕು. ಶಿಕ್ಷಕರಿಗೆ ಸೇವಾ ಭದ್ರತೆ ಒದಗಿಸಬೇಕು. ಹೊಸ ಪಿಂಚಣಿ ಯೋಜನೆ ರದ್ದು ಮಾಡಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಶಿಕ್ಷಕರು ಸಭೆ ಸೇರಲು, ಪ್ರಚಾರ ಮಾಡಲು ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು. ಶ್ರೀಧರ ಪಾಟೀಲ ಕುಲಕರ್ಣಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.