ಅಣ್ಣಿಗೇರಿ: ರೈತರು ಹಿಂಗಾರು ಹಂಗಾಮಿನ ಬೀಜಗಳಾದ ಕಡಲೆ, ಜೋಳ ಸೇರಿದಂತೆ ಮುಂತಾದ ಬೀಜಗಳನ್ನು ಸರ್ಕಾರದ ಸಹಾಯಧನದಲ್ಲಿ ವಿತರಣೆ ಮಾಡಲಾಗುತ್ತಿದೆ. ಪ್ರತಿಯೊಬ್ಬ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಶಾಸಕ ಎನ್. ಎಚ್. ಕೋನರಡ್ಡಿ ಹೇಳಿದರು.
ಅವರು ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ಹಮ್ಮಿಕೊಂಡ ಬಿತ್ತನೆ ಬೀಜಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.
ಕಡಲೆ ಬೀಜ ಪ್ರತಿ ಪ್ಯಾಕೆಟ್ಗೆ ₹ 1,160 ಹಾಗೂ ಜೋಳ ಪ್ರತಿ ಪ್ಯಾಕೆಟ್ಗೆ ₹169 ರ ಸಹಾಯ ಧನದಲ್ಲಿ ನೀಡಲಾಗುತ್ತಿದೆ. ಈಗಾಗಲೇ ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ಅಗತ್ಯ ಬಿದ್ದರೆ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಬೀಜಗಳನ್ನು ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ದಾಸ್ತಾನು ಕೊಠಡಿಗಳನ್ನು ವೀಕ್ಷಣೆ ಮಾಡಿ, ಶೀಘ್ರದಲ್ಲೇ ಹೊಸ ಕಟ್ಟಡ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಸಹಾಯಕ ಕೃಷಿ ನಿರ್ದೇಶಕ ರವೀಂದ್ರಗೌಡ ಪಾಟೀಲ, ಕೃಷಿ ಅಧಿಕಾರಿ ವೀರಣ್ಣ ಗಡಾದ, ಪುರಸಭೆ ಅಧ್ಯಕ್ಷ ಶಿವಾನಂದ ಬೆಳಹಾರ ಸೇರಿದಂತೆ ಕೃಷಿಕ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.