
ಧಾರವಾಡ: ಎಲ್ಲ ಇಲಾಖೆ ಅಧಿಕಾರಿಗಳು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಸಮನ್ವಯ, ಕ್ಷಮತೆಯಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಕೊಸಂಬೆ ಹೇಳಿದರು.
ರಾಜ್ಯ ಮಕ್ಕಳ ಹಕ್ಕಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳ ಕುರಿತು ಗಮನ ಹರಿಸಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಬೇಕು. ಪೊಲೀಸ್ ಸಮವಸ್ತ್ರ ಧರಿಸದೆ ಮಫ್ತಿಯಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಬೇಕು ಎಂದು ತಿಳಿಸಿದರು.
ಆಯಾ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲಾ-ಕಾಲೇಜುಗಳಲ್ಲಿ ಪ್ರತಿ ಗುರುವಾರ ತೆರೆದ ಮನೆ ಕಾರ್ಯಕ್ರಮ ಕಡ್ಡಾಯವಾಗಿ ಆಯೋಜಿಸಬೇಕು. ಶಾಲೆಯಲ್ಲಿ ಸಲಹಾ,ದೂರು ಪೆಟ್ಟಿಗೆ ಅಳವಡಿಸುವುದು, ಮಕ್ಕಳ ಸಹಾಯವಾಣಿ 1098 ಶಾಶ್ವತ ಗೋಡೆ ಫಲಕ, ಕೋಪ್ಟಾ ಕಾಯ್ದೆ ಅನ್ವಯ ಶಾಲಾ ಆವರಣದಲ್ಲಿ 100 ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆ ನಿಷೇಧಕ್ಕೆ ಕ್ರಮ ವಹಿಸಬೇಕು. ಬಾಲ್ಯ ವಿವಾಹ, ಪೋಕ್ಸೊ ಪ್ರಕರಣ ಸೇರಿದಂತೆ ವಿವಿಧ ಕಾಯ್ದೆಗಳ ಕುರಿತು ವ್ಯಾಪಕ ಪ್ರಚಾರದೊಂದಿಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಎಎಸ್ಪಿ ಶಿವಾನಂದ್ ಕಟಗಿ, ಮಕ್ಕಳ ಕಲ್ಯಾಣಾಧಿಕಾರಿ ವಿಜಯ್ ಕುಮಾರ್ ವಿ.ಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಜಾವೂರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.