ADVERTISEMENT

ಸಾವರ್ಕರ್ ವಿರುದ್ಧ ಟೀಕೆ: ಸಿದ್ಧರಾಮಯ್ಯ ಪ್ರತಿಫಲ ಅನುಭವಿಸುತ್ತಾರೆ –ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2019, 10:20 IST
Last Updated 20 ಅಕ್ಟೋಬರ್ 2019, 10:20 IST
ಜಗದೀಶ ಶೆಟ್ಟರ್ ಹಾಗೂ ಸಿದ್ದರಾಮಯ್ಯ
ಜಗದೀಶ ಶೆಟ್ಟರ್ ಹಾಗೂ ಸಿದ್ದರಾಮಯ್ಯ   

ಹುಬ್ಬಳ್ಳಿ: ‘ಬ್ರಿಟಿಷರ ವಿರುದ್ಧ ಹೋರಾಡಿದ ಸಾವರ್ಕರ್ ವಿರುದ್ಧ ಕೀಳಾಗಿ ಮತ್ತು ಏಕವಚನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಅವರು, ಮುಂದೆ ಅದರ ಪ್ರತಿಫಲ ಅನುಭವಿಸುತ್ತಾರೆ’ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅವಹೇಳನಕಾರಿಯಾಗಿ ಮಾತನಾಡಿದರೆ ರಾಷ್ಟ್ರಮಟ್ಟದಲ್ಲಿ ಜನಪ್ರಿಯವಾಗುತ್ತೇನೆ ಎಂದು ಅಂದುಕೊಂಡಿರುವ ಸಿದ್ದರಾಮಯ್ಯ, ಕಾಂಗ್ರೆಸ್‌ನೊಳಗೆ ತಮ್ಮ ನಾಯಕತ್ವದ ವಿರುದ್ಧ ಎದ್ದಿರುವ ಅಸಮಾಧಾನವನ್ನು ಮೊದಲು ಸರಿಪಡಿಸಿಕೊಳ್ಳಲಿ’ ಎಂದು ವ್ಯಂಗ್ಯವಾಡಿದರು.

‘ರಾಷ್ಟ್ರೀಯ ಪಕ್ಷವಾದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ವಿರುದ್ಧವೂ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡುತ್ತಾರೆ. ‌ಆ ಮೂಲಕ ತಮ್ಮ ವ್ಯಕ್ತಿತ್ವವನ್ನು ತಾವೇ ಜಗಜ್ಜಾಹೀರು ಮಾಡಿಕೊಂಡಿದ್ದಾರೆ. ಅವರಂತೆ, ನಾನೂ ಕೂಡ ಮಾತನಾಡಬಲ್ಲೆ. ಆದರೆ, ಅಂತಹ ಮಾತುಗಳಿಂದ ನಮ್ಮ ಗೌರವವೇ ಕುಗ್ಗುತ್ತದೆ ಎಂಬುದರ ಅರಿವಿರಬೇಕು’ ಎಂದರು.

ADVERTISEMENT

‘ಸಿದ್ದರಾಮಯ್ಯ ಮೇಲೂ ಐ.ಟಿ ದಾಳಿ ನಡೆಸಲು ಬಿಜೆಪಿ ಸಂಚು ರೂಪಿಸಿದೆ’ ಎಂಬ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಐ.ಟಿ ಇಲಾಖೆ ಅವರಿಗೇನಾದರೂ ಕರೆ ಮಾಡಿ ತಿಳಿಸಿದೆಯೇ? ಹಾಗಿದ್ದರೆ, ದಿನೇಶ್ ಅವರೇ ದಾಳಿಗೆ ಸಂಚು ರೂಪಿಸಿರಬಹುದು. ಅದಕ್ಕಾಗಿ ಬಿಜೆಪಿ ವಿರುದ್ಧ ಮನಸ್ಸಿಗೆ ಬಂದಂತೆ ಆರೋಪ ಮಾಡುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಶೋಭೆ ತರುವುದಿಲ್ಲ:ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿ, ‘ಸಿದ್ದರಾಮಯ್ಯ ಹಿರಿಯ ರಾಜಕಾರಣಿ. ಸಾವರ್ಕರ್ ಬಗ್ಗೆ ಅವರು ಈ ರೀತಿ ಕೀಳಾಗಿ ಮಾಡನಾಡುವುದು ಅವರಿಗೆ ಶೋಭೆ ತರುವುದಿಲ್ಲ. ಅವರು ಮೊದಲು ಇತಿಹಾಸವನ್ನು ಓದಿ ತಿಳಿದುಕೊಳ್ಳಲಿ’ ಎಂದರು.

‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್‌ಡಿಬಿ) ತಮ್ಮನ್ನು ಅಧ್ಯಕ್ಷರಾಗಿ ನೇಮಿಸಿರುವುದರ ಬಗ್ಗೆ ಎದ್ದಿರುವ ಅಪಸ್ವರ ಕುರಿತು ಮಾತನಾಡಲು ನಿರಾಕರಿಸಿದ ಅವರು, ‘ಆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕೇಳಿ’ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.