ಧಾರವಾಡ: ‘ಹಸಿರುಕ್ರಾಂತಿ ಕಾಲಘಟ್ಟದಲ್ಲಿ ಆಹಾರ ಉತ್ಪಾದನೆ ವೇಗವಾಗಿತ್ತು. ಈಗ ಮಣ್ಣಿನ ಫಲವತ್ತತೆ ಕುಸಿದು, ಕುಂಠಿತಗೊಂಡಿದೆ. ಕೃಷಿ ವಿಶ್ವವಿದ್ಯಾಲಯಗಳು ಇದನ್ನು ಗಂಭೀರವಾಗಿ ಪರಿಗಣಿಸಿ, ಪರಿಹಾರಕ್ಕೆ ಆದ್ಯತೆ ನೀಡಬೇಕು’ ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಹೇಳಿದರು.
ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಜನಸಂಖ್ಯೆಗೆ ಅನುಗುಣವಾಗಿ ಆಹಾರ ಬೆಳೆ ಉತ್ಪಾದನೆ ಹೆಚ್ಚಳ ಮಾಡಬೇಕು’ ಎಂದರು.
‘ಹೈನುಗಾರಿಕೆಯಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಪ್ರತಿ ದಿನ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತದೆ. ರೈತರು ಕೃಷಿ ಜತೆಗೆ ಪಶುಸಂಗೋಪನೆ ಮೊದಲಾದ ಉಪಕಸುಬುಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.
ಇದಕ್ಕೂ ಮುನ್ನ ಮುಖ್ಯಮಂತ್ರಿ ಮತ್ತು ಸಚಿವರು ಹಣ್ಣುಹಂಪಲು ಮತ್ತು ಫಲಪುಷ್ಪಗಳ ಪ್ರದರ್ಶನ ಮಳಿಗೆಗೆ ಭೇಟಿ ನೀಡಿದರು.
ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಸಂತೋಷ ಲಾಡ್, ಎನ್.ಚಲುವರಾಯಸ್ವಾಮಿ, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್.ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.