ಧಾರವಾಡ: ವಿಶ್ವವಿದ್ಯಾಲಯಗಳಲ್ಲಿನ ಹುದ್ದೆಗಳನ್ನುಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ನೇಮಕಾತಿ ಮಾಡಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಬುಧವಾರ ತರಗತಿಗಳನ್ನು ಬಹಿಷ್ಕರಿಸಿ ಧರಣಿ ನಡೆಸಿದರು.
ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಶಿಕ್ಷಕರ ಸಂಘ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಶಿಕ್ಷಕೇತರರ ಸಂಘ, ಸಂಶೋಧನಾ ವಿದ್ಯಾರ್ಥಿಗಳ ಸಂಘ, ಅತಿಥಿ ಉಪನ್ಯಾಸಕರ ಒಕ್ಕೂಟ ಹಾಗೂ ಜ್ಞಾನ ದಾಸೋಹ ಸಮಿತಿಯ ಸದಸ್ಯರು ಹಾಗೂ ವಿದ್ಯಾರ್ಥಿಗಳು ಕುಲಪತಿ ಕಚೇರಿ ಎದುರು ಸರ್ಕಾರದ ಕ್ರಮದ ವಿರುದ್ಧ ಘೋಷಣೆ ಕೂಗಿದರು.
ಸ್ವಾಯತ್ತ ಸಂಸ್ಥೆಯಾಗಿರುವ ವಿಶ್ವವಿದ್ಯಾಲಯದಲ್ಲಿ ಸರ್ಕಾರ ಹಸ್ತಕ್ಷೇಪ ನಡೆಸಿ ಕೆಇಎ ಮೂಲಕ ನೇರ ನೇಮಕಾತಿ ನಡೆಸಲು ಸರ್ಕಾರ ಸಿದ್ಧತೆ ನಡೆಸಿದೆ. ಇದರಿಂದ ಯುಜಿಸಿ ನಿಯಮಗಳನ್ನೇ ನಿರ್ಬಂಧಿಸಲು ಮುಂದಾಗಿರುವುದು ಅಕ್ಷಮ್ಯ. ವಿವಿ ಸ್ವಾಯತ್ತತೆ ಹಾಗೂ ಪ್ರಗತಿಗೆ ಮಾರಕವಾಗಿರುವ ಈ ಕ್ರಮಗಳನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದರು.
ಯುಜಿಸಿ ನಿಯಮಾವಳಿ ಮೂಲಕವೇ ನಡೆಯುತ್ತಿರುವ ನೇಮಕಾತಿಯ ವಿರುದ್ಧವಾಗಿ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಇದರಿಂದ ಯುಜಿಸಿ ಅನುದಾನ ಕಡಿತಗೊಳ್ಳುವ ಅಪಾಯವೂ ಇದೆ ಎಂದು ಧರಣಿ ನಿರತರು ಆತಂಕ ವ್ಯಕ್ತಪಡಿಸಿದರು.
ಕೆಇಎ ನೇಮಕಾತಿಯಿಂದಾಗಿ 15ರಿಂದ 20 ವರ್ಷಗಳಿಂದ ಅತಿಥಿ ಉಪನ್ಯಾಸಕರ ಹಾಗೂ ಸಹಾಯಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಅನ್ಯಾಯವಾಗಲಿದೆ. ಎನ್ಇಟಿ, ಎಸ್ಇಟಿ ಹಾಗೂ ಪಿಎಚ್.ಡಿ ಮಾಡಿ ಅರ್ಹತೆ ಗಿಟ್ಟಿಸಿಕೊಂಡಿರುವ ಉತ್ತರ ಕರ್ನಾಟಕದ ಅಭ್ಯರ್ಥಿಗಳು ಅವಕಾಶ ವಂಚಿತರಾಗಲಿದ್ದಾರೆ. ಇದು ಪ್ರಾದೇಶಿಕ ಅಸಮಾನತೆಗೂ ಕಾರಣವಾಗಲಿದೆ ಎಂದು ಎಚ್ಚರಿಕೆ ನೀಡಿದರು. ಪ್ರಭಾರ ಕುಲಪತಿ ಡಾ. ಎ.ಎಸ್.ಶಿರಾಳಶೆಟ್ಟಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.