ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣಾ ಪ್ರಕ್ರಿಯೆಗೆಸುಪ್ರೀಂ ಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ.
ವಾರ್ಡ್ ಮರು ವಿಂಗಡಣೆ ಮತ್ತು ಮೀಸಲಾತಿ ಪ್ರಕಟಿಸಿದ ನಂತರ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸಿ ಎಂದು ಡಿಸೆಂಬರ್ನಲ್ಲಿ ಬೆಂಗಳೂರಿನ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ವಿಜಯಪುರದ ಮಾಜಿ ಮೇಯರ್ವೊಬ್ಬರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆಗೆ ಎತ್ತಿಕೊಂಡ ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ವಿ. ಬಾಲಸುಬ್ರಹ್ಮಣಿಯನ್ ವಿಚಾರಣೆ ಪೂರ್ಣಗೊಳ್ಳುವ ತನಕ ಪಾಲಿಕೆ ಚುನಾವಣೆ ನಡೆಸುವಂತಿಲ್ಲ ಎಂದು ಆದೇಶದಲ್ಲಿ ಹೇಳಿದ್ದಾರೆ.
ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ’ವಾರ್ಡ್ಗಳ ಮರುವಿಂಗಡಣೆ ಮತ್ತು ಮೀಸಲಾತಿ ಬದಲಿಸಿದ ಬಳಿಕವಷ್ಟೇ ಚುನಾವಣೆ ನಡೆಸಿ ಎಂದು ಹೈಕೋರ್ಟ್ ಸರ್ಕಾರಕ್ಕೆ ನೀಡಿದ್ದ ನಿರ್ದೇಶನಕ್ಕೆ ‘ಸುಪ್ರೀಂ’ ತಡೆಯಾಜ್ಞೆ ನೀಡಿದೆ’ ಎಂದರು.
ಸರ್ಕಾರಕ್ಕೆ ವರದಿ: ಇಲ್ಲಿನ ಮಹಾನಗರ ಪಾಲಿಕೆಹೊಸ ಮಾರ್ಗಸೂಚಿಯ ಪ್ರಕಾರ ವಾರ್ಡ್ ವಿಂಗಡಣೆ ಮಾಡಿ ಸೋಮವಾರವೇ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
‘ನಿಯಮಗಳ ಪ್ರಕಾರ ವಾರ್ಡ್ ವಿಂಗಡಣೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಆಕ್ಷೇಪಣೆಗಳನ್ನು ಆಹ್ವಾನಿಸಿದ ಬಳಿಕ ವರದಿ ಅಂತಿಮಗೊಳ್ಳಲಿದೆ. ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ ದಾಖಲೆ ನನಗೆಲಭಿಸಿಲ್ಲ. ಇದು ಖಚಿತವಾದರೆ ಸುಪ್ರೀಂ ಕೋರ್ಟ್ ಆದೇಶದ ಬಳಿಕವೇ ಮುಂದಿನ ಪ್ರಕ್ರಿಯೆ ನಡೆಸಬೇಕಾಗುತ್ತದೆ’ ಎಂದು ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.