ಧಾರವಾಡ: ‘ಜಂತುಹುಳು ನಿವಾರಕ ‘ಅಲ್ಬೆಂಡಜೋಲ್’ ಮಾತ್ರೆಯನ್ನು ಮಕ್ಕಳು ಆರು ತಿಂಗಳಿಗೊಮ್ಮೆ ಸೇವಿಸಬೇಕು. ಇದರಿಂದ ಹೊಟ್ಟೆನೋವು, ಆಯಾಸ, ರಕ್ತಹೀನತೆ ತಡೆಗಟ್ಟಬಹುದು’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ರಾಷ್ಟ್ರೀಯ ಜಂತುಹುಳು ನಿವಾರಣಾ ಅಭಿಯಾನದ ಅಂಗವಾಗಿ ನಗರದ ಕೆ.ಇ. ಬೋರ್ಡ್ ಸಂಸ್ಥೆಯ ಕರ್ನಾಟಕ ಹೈಸ್ಕೂಲ್ನಲ್ಲಿ ಆರೋಗ್ಯ ಇಲಾಖೆಯಿಂದ ಸೋಮವಾರ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ‘ಅಲ್ಬೆಂಡಜೋಲ್’ ಮಾತ್ರೆ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಜಿಲ್ಲೆಯಲ್ಲಿ ಒಂದು ವರ್ಷದಿಂದ 19 ವರ್ಷದೊಳಗಿನ 5.8 ಲಕ್ಷ ಮಕ್ಕಳಿಗೆ ಜಂತುಹುಳು ನಿವಾರಕ ಮಾತ್ರೆಯನ್ನು ಉಚಿತವಾಗಿ ವಿತರಿಸಲಾಗುತ್ತದೆ. ಶಾಲಾ–ಕಾಲೇಜುಗಳಿಂದ ಹೊರಗುಳಿದ ಮಕ್ಕಳಿಗೆ ಡಿಸೆಂಬರ್ 16ರಂದು ಮಾತ್ರೆ ನೀಡಲಾಗುತ್ತದೆ’ ಎಂದರು.
‘ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ರಕ್ತಹೀನತೆ ಹೆಚ್ಚು ಕಂಡುಬರುತ್ತಿದೆ. ಜಂತುಹುಳುವನ್ನು ನಿಯಂತ್ರಿಸಿದರೆ ಶೇ 70ರಷ್ಟು ರಕ್ತಹೀನತೆ ನಿಯಂತ್ರಿಸಬಹುದು. ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ, ಪಿಯು ಕಾಲೇಜು ಮತ್ತು ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಜಂತುಹುಳು ನಿವಾರಕ ಮಾತ್ರೆ ಉಪಯೋಗದ ಕುರಿತು ಅರಿವು ಮೂಡಿಲಾಗುತ್ತಿದೆ’ ಎಂದು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ‘ರೋಗಮುಕ್ತ ಸಮಾಜದ ನಿರ್ಮಾಣ ಈ ಅಭಿಯಾನದ ಉದ್ದೇಶವಾಗಿದೆ. ಮಕ್ಕಳು ಮಾತ್ರೆ ತೆಗೆದುಕೊಳ್ಳಲು ನಿರ್ಲಕ್ಷ ಮಾಡಬಾರದು. ಆರೋಗ್ಯ ಕಾಪಾಡಿಕೊಳ್ಳಲು ಈ ಮಾತ್ರೆ ಸಹಕಾರಿ’ ಎಂದರು.
ಕೆ.ಇ.ಬೋರ್ಡ್ ಸಂಸ್ಥೆಯ ಆಡಳಿತಾಧಿಕಾರಿ ಜಿ.ಆರ್. ಭಟ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಸುಜಾತಾ ಹಸವೀಮಠ, ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಕೆ.ಎನ್. ತನುಜಾ, ಆರೋಗ್ಯ ಇಲಾಖೆ ಅಧಿಕಾರಿ ಬಿ.ಆರ್. ಪಾತ್ರೋಟ, ಪ್ರಾಚಾರ್ಯ ಎನ್.ಎಸ್. ಸವಣೂರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.