ADVERTISEMENT

ವಿರೋಧ ಪಕ್ಷಗಳ ಒಡಕಿನ ಲಾಭ ಪಡೆಯಿರಿ: ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2019, 15:46 IST
Last Updated 8 ಅಕ್ಟೋಬರ್ 2019, 15:46 IST
ಜಗದೀಶ್‌ ಶೆಟ್ಟರ್‌
ಜಗದೀಶ್‌ ಶೆಟ್ಟರ್‌   

ಹುಬ್ಬಳ್ಳಿ: ‘ರಾಜ್ಯದ ವಿರೋಧ ಪಕ್ಷಗಳಲ್ಲಿ ಒಗ್ಗಟ್ಟು ಇಲ್ಲ. ಆಂತರಿಕವಾಗಿ ಮತ್ತು ಬಾಹ್ಯವಾಗಿ ಪರಸ್ಪರ ದೂಷಣೆಯಲ್ಲಿ ತೊಡಗಿವೆ. ಬಿಜೆಪಿ ಇದರ ಲಾಭವನ್ನು ಪಡೆದು ಪದವೀಧರ ಚುನಾವಣೆಯನ್ನು ಗೆಲ್ಲಬೇಕಿದೆ’ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಪಾಪದ ಕೊಡ ತುಂಬಿದ್ದರಿಂದಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಬಿದ್ದಿದೆ. ಅಧಿಕಾರಕ್ಕಾಗಿ ಒಂದಾಗಿದ್ದ ಸಿದ್ದರಾಮಯ್ಯ ಮತ್ತು ಎಚ್‌.ಡಿ. ಕುಮಾರಸ್ವಾಮಿ, ಇದೀಗ ಪರಸ್ಪರ ಜಗಳವಾಡುತ್ತಿದ್ದಾರೆ’ ಎಂದರು.

‘ವಿಧಾನಸಭೆ ಚುನಾವಣೆ ನಡೆಯುತ್ತಿರುವ ಮಹಾರಾಷ್ಟ್ರದಲ್ಲೂ ಕಾಂಗ್ರೆಸ್‌ ಪಕ್ಷ ಬಲಹೀನವಾಗಿದೆ. ಆಂತರಿಕ ಒಡಕು ಹಾಗೂ ಒಗ್ಗಟ್ಟಿನ ಕೊರತೆಯಿಂದ ಬಳಲುತ್ತಿದೆ. ಇದೆಲ್ಲವನ್ನೂ ಗಮನಿಸಿದರೆ, ದೇಶ ಮುಂದೊಂದು ದಿನ ಕಾಂಗ್ರೆಸ್ ಮುಕ್ತವಾಗುವುದು ಖಚಿತ’ ಎಂದು ವ್ಯಂಗ್ಯವಾಡಿದರು.

ADVERTISEMENT

‘ವಿರೋಧ ಪಕ್ಷಗಳು ಕೇವಲ ಪ್ರವಾಹ ವಿಚಾರವನ್ನಿಟ್ಟುಕೊಂಡು ಟೀಕೆ ಮಾಡುತ್ತಿವೆ. ಆದರೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ಪರಿಹಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಬಗ್ಗೆಯೇ ಅವರಿಗೆ ಗೊತ್ತಿಲ್ಲ. ಹಾಗಾಗಿ, ಮನಸೋ ಇಚ್ಛೆ ಟೀಕೆ ಮಾಡುತ್ತಿವೆ’ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಅಮೃತ ದೇಸಾಯಿ, ಶಾಸಕ ಶಂಕರಪಾಟೀಲ ಮುನೇನಕೊಪ್ಪ, ಮುಖಂಡರಾದ ಮಹೇಶ ಟೆಂಗಿನಕಾಯಿ, ಸೀಮಾ ಮಸೂತಿ, ನಾಗೇಶ ಕಲಬುರ್ಗಿ, ಈರಣ್ಣ ಜಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.