ಹುಬ್ಬಳ್ಳಿ: ‘ಕೋವಿಡ್–19 ಮೂರನೇ ಅಲೆ ತಡೆಯುವುದಕ್ಕಾಗಿ ಎಲ್ಲರೂ ಕೋವಿಡ್ ಲಸಿಕೆ ಪಡೆಯಬೇಕು. ಲಾಕ್ಡೌನ್ ಸಡಿಲಗೊಂಡಿದ್ದರೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಕೆಯೊಂದಿಗೆ, ಹೊರಗೆ ಬಂದಾಗ ಸೂಕ್ತ ಅಂತರ ಕಾಯ್ದುಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ಹಾಗೂ ಫೋರ್ಥ್ವೇವ್ ಫೌಂಡೇಷನ್ ಹುಬ್ಬಳ್ಳಿಯ ದೇಶಪಾಂಡೆ ನಗರದ ರೋಟರಿ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಅಂಗವಿಕಲ ಮಕ್ಕಳಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಿ ಅವರು ಮಾತನಾಡಿದರು.
‘ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಧಾರವಾಡ ಜಿಲ್ಲೆಗೆ ಅಗತ್ಯವಿರುವ ಲಸಿಕೆಯನ್ನು ಸಮರ್ಪಕವಾಗಿ ಪೂರೈಸುವ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ರಾಜ್ಯದ ಆರೋಗ್ಯ ಸಚಿವರೊಂದಿಗೆ ಚರ್ಚಿಸಿದ್ದೇನೆ. ಅಂಗವಿಕಲರ ಆರೋಗ್ಯ ರಕ್ಷಣೆಯಲ್ಲಿ ಪಾಲಕರ ಪಾತ್ರ ಮಹತ್ತರವಾದದ್ದು. ಹಾಗಾಗಿ, ಪಾಲಕರು ತಪ್ಪದೆ ಲಸಿಕೆ ಪಡೆಯಬೇಕು’ ಎಂದು ಸಲಹೆ ನೀಡಿದರು.
ಫೌಂಡೇಷನ್ನ ಬಸವರಾಜ ಮ್ಯಾಗೇರಿ ಮಾತನಾಡಿ, ‘ಜಿಲ್ಲೆಯ 200 ಅಂಗವಿಕಲ ಮಕ್ಕಳಿಗೆ ಫೌಂಡೇಷನ್ನಿಂದ ಆಹಾರ ಸಾಮಗ್ರಿ ಕಿಟ್ ವಿತರಿಸಲಾಗುತ್ತಿದೆ. ಇಂದು 75 ಮಕ್ಕಳಿಗೆ ನೀಡಲಾಗಿದೆ’ ಎಂದರು.
ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಿರುವ ಅಂಗವಿಕಲರ ಆರೈಕೆ ಕೇಂದ್ರಕ್ಕೆ ಶೆಟ್ಟರ್ ಭೇಟಿ ನೀಡಿದರು. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ ಕುಮಾರ ಹಂಚಾಟೆ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರಿಕಟ್ಟಿ, ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಅಶ್ವಿನಿ ಮಜ್ಜಿಗಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.