ADVERTISEMENT

ಹುಬ್ಬಳ್ಳಿ: 11ಕ್ಕೆ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2023, 6:35 IST
Last Updated 9 ಫೆಬ್ರುವರಿ 2023, 6:35 IST

ಹುಬ್ಬಳ್ಳಿ: ‘ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ರಾಜ್ಯ ಮಟ್ಟದ 3ನೇ ಮಹಾಸಭೆ -2023, ಗ್ರಾಮೀಣ ಪರಿಹಾರ ಭತ್ಯೆಗಾಗಿ ಹಕ್ಕೊತ್ತಾಯ ಸಮಾವೇಶ ಹಾಗೂ ರಾಜ್ಯ ಮಟ್ಟದ ಗ್ರಾಮೀಣ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಫೆ. 11ರಂದು ಬೆಳಿಗ್ಗೆ 10.30ಕ್ಕೆ ನಗರದ‌ ಸವಾಯಿ ಗಂಧರ್ವ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಅಶೋಕ ಸಜ್ಜನ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಗ್ರಾಮೀಣ ಮಟ್ಟದ ಶಿಕ್ಷಕರ ಪ್ರೋತ್ಸಾಹಿಸುವುದಕ್ಕಾಗಿ ಸಮಾರಂಭದಲ್ಲಿ 150 ಮಂದಿಗೆ ಪ್ರಶಸ್ತಿ‌ ನೀಡಲಾಗುವುದು. ಶಿಕ್ಷಣ ಸಚಿವ ಬಿ.ಸಿ. ನಾಗೇಶ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದರು.

‘ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಉದ್ಘಾಟಿಸುವರು. ಉಪ್ಪಿನ ಬೆಟಗೇರಿಯ ಮೂರು ಸಾವಿರ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಅತಿಥಿಗಳಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹಾಲಪ್ಪ ಆಚಾರ್, ಶಂಕರಪಾಟೀಲ‌ ಮುನೇನಕೊಪ್ಪ, ಶಾಸಕರಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ ಭಾಗವಹಿಸುವರು’ ಎಂದು ತಿಳಿಸಿದರು.

ADVERTISEMENT

‘ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಂತೆ ಸಮಾರಂಭದಲ್ಲಿ ಸರ್ಕಾರಕ್ಕೆ ಆಗ್ರಹಿಸಲಾಗುತ್ತದೆ. ‘ಸರ್ಕಾರಿ ಶಾಲೆಗಳ ಶ್ರೇಯೋಭಿವೃದ್ಧಿಗಾಗಿ ನಾವು- ನೀವು’ ವಿಷಯ ಕುರಿತು ಉಪನ್ಯಾಶಕಿ ಡಾ. ಜ್ಯೋತಿ ಕೆ.ಸಿ. ಉಪನ್ಯಾಸ ನೀಡುವರು’ ಎಂದು ಹೇಳಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ, ಗೌರವ ಅಧ್ಯಕ್ಷ ಎಲ್.ಐ. ಲಕ್ಕನವರ, ರಾಜ್ಯ ಕಾರ್ಯಾಧ್ಯಕ್ಷ ಶರಣಪ್ಪ ಆರ್.ಕೆ. ಹಾಗೂ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಅಕ್ಬರಅಲಿ ಸೋಲಾಪುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.