ಹುಬ್ಬಳ್ಳಿ: ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ ಹಾಗೂ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ವಯೋಮಿತಿಯ ನಿರ್ಬಂಧ ಹೇರದೆ ಕೋವಿಡ್ ನಿರೋಧಕ ಲಸಿಕೆ ನೀಡಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
‘ರಾಜ್ಯ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಈ ಕುರಿತು ನನಗೆ ಮನವಿ ಮಾಡಿಕೊಂಡಿದ್ದು, ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. ಜುಲೈ 1ರಿಂದ ಶಾಲೆಗಳು ಪುನರಾರಂಭವಾಗುತ್ತವೆ ಎಂದು ಶಿಕ್ಷಣ ಸಚಿವರು ಹೇಳುತ್ತಿದ್ದಾರೆ. ಆದ್ದರಿಂದ ತುರ್ತಾಗಿ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು. ಲಸಿಕೆ ಇಲ್ಲದ ಕಾರಣಕ್ಕೆ ಅನೇಕ ಶಿಕ್ಷಕರು ಪ್ರಾಣ ಕಳೆದುಕೊಂಡಿದ್ದಾರೆ. ಮುಂದೆಯೂ ಇದೇ ರೀತಿ ಆಗುವುದು ಬೇಡ‘ ಎಂದಿದ್ದಾರೆ.
‘ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ವಿಶೇಷ ಪ್ಯಾಕೇಜ್ ನೀಡಿದ ಸರ್ಕಾರದ ಕ್ರಮ ಸ್ವಾಗತಾರ್ಹ. ಆದರೆ, ಪ್ಯಾಕೇಜ್ ಪ್ರಮಾಣ ಕಡಿಮೆಯಾಗಿದ್ದು, ಇನ್ನೂ ಹೆಚ್ಚಿನ ನೆರವು ನೀಡಬೇಕು. ಕೋವಿಡ್ ಕರ್ತವ್ಯದಲ್ಲಿದ್ದಾಗ ಶಿಕ್ಷಕರು ಮೃತಪಟ್ಟರೆ ಅವರ ಕುಟುಂಬದ ಅವಲಂಬಿತರಿಗೆ ಸರ್ಕಾರಿ ನೌಕರಿ ಕೊಡಬೇಕು‘ ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.