ಹುಬ್ಬಳ್ಳಿ: ಕೆಫೆ ಕಾಫಿ ಡೇ ಕಂಪನಿಯ ಚೇರ್ಮನ್ ಆಗಿರುವ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಅವರನ್ನು ಸರ್ಕಾರ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುವ ಔಚಿತ್ಯವೇನಿದೆ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಪ್ರಶ್ನಿಸಿದ್ದಾರೆ.
ಉಪಮುಖ್ಯಮಂತ್ರಿ ಸಿ.ಎಸ್. ಅಶ್ವತ್ಥ ನಾರಾಯಣ ಅವರಿಗೆ ಪತ್ರ ಬರೆದಿರುವ ಅವರು ‘ರಂಗನಾಥ್ ದಕ್ಷತೆ, ಪ್ರಾಮಾಣಿಕತೆ ಮತ್ತು ಸರಳತೆಯಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರು ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಹುದ್ದೆಯಲ್ಲಿರುವಾಗಲೇ ಕೆಫೆ ಕಾಫಿ ಡೇಗೆ ನೇಮಕಗೊಂಡರು. ಈ ಕಂಪನಿ ಆರ್ಥಿಕ ಅಪರಾಧವೆಸಗಿದ ಆರೋಪ ಎದುರಿಸುತ್ತಿದೆ. ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಯುತ್ತಿದೆ. ಇಂಥ ಕಂಪನಿಗೆ ಉಪಾಧ್ಯಕ್ಷರಾಗುವ ಮೊದಲು ಸೂಕ್ಷ್ಮತೆ ಅರಿತುಕೊಳ್ಳಬೇಕಿತ್ತು’ ಎಂದಿದ್ದಾರೆ.
‘ರಂಗನಾಥ್ ಅವರನ್ನು ಗೌರವದಿಂದ ಕಾಣುತ್ತೇನೆ. ಸಾರ್ವಜನಿಕ ಮತ್ತು ಖಾಸಗಿ ಹಿತಾಸಕ್ತಿಗಳ ನಡುವಿನ ಸಂಘರ್ಷಕ್ಕೆ ಈ ವಿಷಯ ಕಾರಣವಾಗಿದೆ. ಆದ್ದರಿಂದ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಹುದ್ದೆಯಿಂದ ಮುಕ್ತಗೊಳಿಸುವುದು ಸೂಕ್ತ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.