ADVERTISEMENT

ಕಲ್ಲಿದ್ದಲು ಸಂಗ್ರಹವಿದೆ, ಗಾಬರಿ ಬೇಡ: ಸಚಿವ ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2022, 9:49 IST
Last Updated 30 ಏಪ್ರಿಲ್ 2022, 9:49 IST
   

ಹುಬ್ಬಳ್ಳಿ: 'ದೇಶದ ಥರ್ಮಲ್ ಪವರ್ ಪ್ಲಾಂಟ್'ಗಳಲ್ಲಿ 21.55 ಮಿಲಿಯನ್‌ ಟನ್ ಹಾಗೂ ಕೋಲ್ ಕಂಪನಿಗಳಲ್ಲಿ 72.05 ಮಿಲಿಯನ್ ಕಲ್ಲಿದ್ದಲು ಸಂಗ್ರಹವಿದೆ. ಯಾರೂ ಗಾಬರಿ ಆಗುವ ಅಗತ್ಯವಿಲ್ಲ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈ ತಿಂಗಳು ಅನಿರೀಕ್ಷಿತವಾಗಿ ಬಿಸಿಲು ಹೆಚ್ಚಿದ್ದು, ವಿದ್ಯುತ್'ಗೆ ಅತಿ ಹೆಚ್ಚು ಬೇಡಿಕೆ ಉಂಟಾಗಿದೆ. ದೇಶದ ಕೈಗಾರಿಕೆಗಳು ಸಹ ಪುಟಿದೆದ್ದಿವೆ. ಇವುಗಳಿಂದಾಗಿ ಒಮ್ಮೆಲೆ ಕಲ್ಲಿದ್ದಲಿಗೆ ಬೇಡಿಕೆ ಹೆಚ್ಚಾಗಿದೆ. ದೂರದೂರಿನ ಪವರ್ ಪ್ಲಾಂಟ್'ಗಳಲ್ಲಿ ಹತ್ತು ದಿನಕ್ಕಾಗುವಷ್ಟು ಕಲ್ಲಿದ್ದಲು ಸಂಗ್ರಹವಿದೆ' ಎಂದರು.

'ಹತ್ತು ದಿನಗಳ ನಂತರ ದೇಶ ಸಂಪೂರ್ಣ ಕತ್ತಲಾಗುತ್ತದೆ ಎನ್ನುವ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದಾರೆ. ಅದು ಸರಿಯಲ್ಲ. ಕೇಂದ್ರ ಸರ್ಕಾರ ನಿರಂತರವಾಗಿ 1.07 ಮಿಲಿಯನ್ ಟನ್ ಕಲ್ಲಿದ್ದಲು ಪೂರೈಕೆ ಮಾಡುತ್ತಿದೆ. ಬೇಡಿಕೆ ಒಮ್ಮೆಲೆ ಹೆಚ್ಚಾಗಿದ್ದರಿಂದ ಸಾಗಾಟ ಮಾಡಲು ರೈಲ್ವೆ ಇಲಾಖೆ ಸಹ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಖಾಲಿಯಾದಷ್ಟು ಕಲ್ಲಿದ್ದಲನ್ನು ತುಂಬುತ್ತಿದ್ದೇವೆ' ಎಂದು ತಿಳಿಸಿದರು.

ADVERTISEMENT

'ರಾಜ್ಯ ಸರ್ಕಾರ ಪಿಎಸ್'ಐ ಮರು ಪರೀಕ್ಷೆ ನಡೆಸುವ ಕುರಿತು ತೀರ್ಮಾನ ಕೈಗೊಂಡಿದೆ. ಕೆಲವು ಸಂದರ್ಭದಲ್ಲಿ ಇಂತಹ ನಿರ್ಧಾರ ಅನಿವಾರ್ಯ. ತಂತ್ರಜ್ಞಾನ ದುರುಪಯೋಗ ಪಡಿಸಿಕೊಂಡು ಕೆಲವರು ಅಪರಾಧ ಮಾಡಿದ್ದಾರೆ. ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿ, ಪ್ರಮುಖ ಆರೋಪಿಗಳನ್ನು ಬಂಧಿಸಿದೆ. ಮುಂದೆ ಹೀಗಾಗದಂತೆ ಮುಖ್ಯಮಂತ್ರಿ ಕೆಲವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ' ಎಂದು ಸಚಿವ ಜೋಶಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.