ADVERTISEMENT

ಜನಪರ ಯೋಜನೆ ಮೂಲಕ ಅಭಿವೃದ್ಧಿಗೆ ಆದ್ಯತೆ: ಸಚಿವ ಹಾಲಪ್ಪ ಆಚಾರ್

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 6:06 IST
Last Updated 27 ಜನವರಿ 2023, 6:06 IST
ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎನ್‌ಸಿಸಿ ಕೆಡೆಟ್‌ಗಳು ಪಥ ಸಂಚಲನ ನಡೆಸಿ ರಾಷ್ಟ್ರಧ್ವಜಕ್ಕೆ ಗೌರವ ಸಮರ್ಪಿಸಿದರು
ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎನ್‌ಸಿಸಿ ಕೆಡೆಟ್‌ಗಳು ಪಥ ಸಂಚಲನ ನಡೆಸಿ ರಾಷ್ಟ್ರಧ್ವಜಕ್ಕೆ ಗೌರವ ಸಮರ್ಪಿಸಿದರು   

ಧಾರವಾಡ: ವಿವಿಧ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ರಾಜ್ಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಈವರೆಗೆ ಜಿಲ್ಲೆಯ 1.35ಲಕ್ಷ ರೈತರ ಬ್ಯಾಂಕ್ ಖಾತೆ ₹365.20 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ’ ಎಂದು ಜಿಲ್ಲಾ ಉಸ್ತವಾರಿ ಸಚಿವ ಹಾಲಪ್ಪ ಆಚಾರ ತಿಳಿಸಿದರು.

ನಗರದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿವು ಗುರುವಾರ ಬೆಳಿಗ್ಗೆ ಹಮ್ಮಿಕೊಂಡ 74ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಯುವಕರಿಗೆ, ಮಹಿಳೆಯರಿಗೆ, ರೈತರಿಗೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ರೈತ ವಿದ್ಯಾನಿಧಿ ಮೂಲಕ ಈವರೆಗೆ 19,384 ವಿದ್ಯಾರ್ಥಿಗಳಿಗೆ ₹10.14 ಕೋಟಿಯಷ್ಟು ಶಿಷ್ಯವೇತನವನ್ನು ಸರ್ಕಾರ ಬಿಡುಗಡೆ ಮಾಡಿದೆ’ ಎಂದರು.

ADVERTISEMENT

‌‘ನವಲಗುಂದದಲ್ಲಿ ಬೃಹತ್ ಜವಳಿ ಪಾರ್ಕ್ ಅನ್ನು ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುತ್ತಿದ್ದು, ಸುಮಾರು 3 ಸಾವಿರ ಯುವಜನರಿಗೆ ಉದ್ಯೋಗ ದೊರೆಯಲಿದೆ. ಮುಂಬರುವ ದಿನಗಳಲ್ಲಿ ಪ್ರಧಾನಮಂತಿ ಆವಾಸ್ ಯೋಜನೆಯ ಸರ್ವರಿಗೂ ಸೂರು ಕಾರ್ಯಕ್ರಮದಡಿ ಸರ್ಕಾರ, ಸುಮಾರು ₹48 ಕೋಟಿ ವೆಚ್ಚದಲ್ಲಿ ಜಿಲ್ಲೆಯಲ್ಲಿ 7692 ಮನೆಗಳ ನಿರ್ಮಾಣ ಮಾಡಲಾಗುವುದು’ ಎಂದರು.

ಕರ್ನಾಟಕ ಬಯಲು ಸೀಮೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತವನಪ್ಪ ಅಷ್ಟಗಿ, ರಾಜೇಶ ಕೋಟೆನ್ನವರ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತ ರಮಣ ಗುಪ್ತಾ, ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಸುರೇಶ್ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಉಪವಿಭಾಗಾಧಿಕಾರಿ ಅಶೋಕ ತೇಲಿ, ಡಿಡಿಪಿಐ ಎಸ್.ಎಸ್. ಕೆಳದಿಮಠ, ಡಿಎಚ್ಒ ಡಾ. ಪಾಟೀಲ ಶಶಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.