ADVERTISEMENT

ವೈದ್ಯ ವಿದ್ಯಾರ್ಥಿನಿ ಕೊಲೆ| ನಾಳೆ ಖಾಸಗಿ ಆಸ್ಪತ್ರೆಗಳ ಒಪಿಡಿ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2024, 16:08 IST
Last Updated 16 ಆಗಸ್ಟ್ 2024, 16:08 IST

ಹುಬ್ಬಳ್ಳಿ: ಕೋಲ್ಕತ್ತಾದಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಕೊಲೆ ಪ್ರಕರಣವನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ನೀಡಿದ ಕರೆಯ ಮೇರೆಗೆ ಹುಬ್ಬಳ್ಳಿಯಲ್ಲೂ ಶನಿವಾರ ಖಾಸಗಿ ಆಸ್ಪತ್ರೆಗಳ ಒಪಿಡಿ ಸ್ಥಗಿತಗೊಳ್ಳಲಿವೆ. ತುರ್ತು ಪ್ರಕರಣಗಳನ್ನು ಹೊರತುಪಡಿಸಿ, ಇನ್ನುಳಿದ ಯಾವುದೇ ವೈದ್ಯಕೀಯ ಸೇವೆಗಳು ಲಭ್ಯ ಇರುವುದಿಲ್ಲ. 

ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿದೆ. ವೈದ್ಯರಿಗೆ ಸುರಕ್ಷತೆ ಇಲ್ಲದಂತಾಗಿದೆ. ಸರ್ಕಾರ ಇದರ ಬಗ್ಗೆ ತಕ್ಷಣ ಕ್ರಮಕೈಗೊಂಡು, ವೈದ್ಯರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಐಎಂಎ ಒತ್ತಾಯಿಸಿದೆ. ಸರ್ಕಾರದ ಮೇಲೆ ಒತ್ತಡ ತರಲು ಒಂದು ದಿನದ ಒಪಿಡಿ ಸ್ಥಗಿತಗೊಳಿಸಲು ನಿರ್ಧರಿಸಿದೆ’ ಎಂದು ಹುಬ್ಬಳ್ಳಿ ಐಎಂಎ ಅಧ್ಯಕ್ಷ ಡಾ.ವೆಂಕಟೇಶ ಮೂಲಿಮನಿ ತಿಳಿಸಿದರು.

‘ಶನಿವಾರ (ಆ.17) ಬೆಳಿಗ್ಗೆ 6ಗಂಟೆಯಿಂದ ಭಾನುವಾರ (ಆ.18) ಬೆಳಿಗ್ಗೆ 6 ಗಂಟೆಯವರೆಗೆ ಮುಷ್ಕರ ನಡೆಯಲಿದೆ. ಶನಿವಾರ ಸಂಜೆ 4.30ಕ್ಕೆ ಹುಬ್ಬಳ್ಳಿಯ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು’ ಎಂದು ಅವರು ಹೇಳಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.