ಧಾರವಾಡ: ‘ರಾಜ್ಯದಲ್ಲಿಅಸ್ಥಿರತೆಯ ಸರ್ಕಾರ ಆಡಳಿತ ನಡೆಸುತ್ತಿದೆ.ಕೊರೊನಾ ಸಂಕಷ್ಟ ಕಾಲದಲ್ಲೂ ಬಿಜೆಪಿ ನಾಯಕರು ಕುರ್ಚಿಗಾಗಿ ಜಗಳಾಡುತ್ತಿದ್ದಾರೆ’ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಇಲ್ಲ ಎಂದ ಮೇಲೆ ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿ ಎಂದು ಯಡಿಯೂರಪ್ಪ ಹೇಳುವ ಅವಶ್ಯಕತೆ ಇರಲಿಲ್ಲ. ಆದರೆ, ಅವರ ಹೇಳಿಕೆ ಗಮನಿಸಿದರೆ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇರುವುದು ಸ್ಪಷ್ಟವಾಗಿ ಎದ್ದು ಕಾಣುತ್ತಿದೆ’ ಎಂದರು.
‘ಯಾರು ಮುಖ್ಯಮಂತ್ರಿ ಆಗಬೇಕು ಎನ್ನುವುದು ಆ ಪಕ್ಷದ ಆಂತರಿಕ ವಿಚಾರ. ಆದರೆ, ಕರೊನಾ ಸಂದರ್ಭದಲ್ಲಿ ಇಂಥ ಚರ್ಚೆ ನಡೆಸುವುದು ಸರಿಯಲ್ಲ. ಸರ್ಕಾರದ ಸಚಿವರು ಒಗ್ಗಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ. ಒಬ್ಬೊಬ್ಬ ಮಂತ್ರಿ ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ರೈತರಿಗೆ ಸರ್ಕಾರ ಹಣ ನೀಡುತ್ತಿದೆ. ಆದರೆ, ಅದರ ಮೂರು ಪಟ್ಟು ಹಣವನ್ನು ಬೇರೆ ಕಡೆಯಿಂದ ವಾಪಸ್ ಪಡೆಯುತ್ತಿದೆ. ಇದು ಕೇವಲ ಘೋಷಣೆ ಮಾಡುವ ಸರ್ಕಾರವಾಗಿದೆ’ ಎಂದು ಟೀಕಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.