ಬೆಂಗಳೂರು: ಕೇಂದ್ರ ಸರ್ಕಾರವು ಬೆಂಗಳೂರು–ಧಾರವಾಡ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಿದೆ.
ಬೆಂಗಳೂರು–ಬೆಳಗಾವಿ ನಡುವೆ ಹೊಸದಾಗಿ ವಂದೇ ಭಾರತ್ ರೈಲು ಸೇವೆ ಆರಂಭಿಸಲು ಯೋಜಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಆಹಾರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು–ಧಾರವಾಡ ನಡುವಿನ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿ ಜೋಶಿ ಅವರು ವೈಷ್ಣವ್ ಅವರಿಗೆ ಫೆಬ್ರುವರಿಯಲ್ಲಿ ಪತ್ರ ಬರೆದಿದ್ದರು. ‘ಈ ರೈಲು ಬೆಳಗಾವಿಯಿಂದ ಬೆಳಿಗ್ಗೆ ಹೊರಡಲಿದೆ’ ಎಂದು ವೈಷ್ಣವ್ ತಿಳಿಸಿದ್ದಾರೆ.
ಈ ಮಾಹಿತಿಯನ್ನು ಕೇಂದ್ರದ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಎಕ್ಸ್ ಪೋಸ್ಟ್ನಲ್ಲಿ ಹಂಚಿಕೊಂಡಿದ್ದಾರೆ.
ಬೆಂಗಳೂರು - ಬೆಳಗಾವಿ ನಡುವೆ ವಂದೇ ಭಾರತ್ ರೈಲಿಗೆ ನನ್ನ ಕೋರಿಕೆಯ ಮೇರೆಗೆ ಅನುಮೋದನೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಎಂದು ಅವರು ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ವಂದೇ ಭಾರತ್ ರೈಲು ಸಂಪರ್ಕದಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ದೊಡ್ಡ ಉತ್ತೇಜನ ಸಿಗಲಿದೆ ಎಂದೂ ಅವರು ಹೇಳಿದ್ದಾರೆ.
ರೈಲ್ವೆ ಸಚಿವರ ಆದೇಶ ಪ್ರತಿಯನ್ನೂ ಜೋಶಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕರ್ನಾಟಕಕ್ಕೆ ಸಂಬಂಧಿಸಿದಂತೆ ಬೆಂಗಳೂರು–ಧಾರವಾಡ, ಮೈಸೂರು–ಚೆನ್ನೈ, ಯಶವಂತಪುರ–ಕಾಚಿಗುಡ, ಬೆಂಗಳೂರು ಕಂಟೋನ್ಮೆಂಟ್–ಕೊಯಮತ್ತೂರು, ಮಂಗಳೂರು ಸೆಂಟ್ರಲ್–ಮಡಗಾಂವ್ ನಡುವೆ ವಂದೇ ಬಾರತ್ ಎಕ್ಸ್ಪ್ರೆಸ್ ರೈಲುಗಳು ಸಂಚರಿಸುತ್ತಿವೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.