ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯ ಹಾಗೂ ಪಕ್ಷದ ಸಂಘಟನೆಯಿಂದ ದೊಡ್ಡ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದೆ. ಧಾರವಾಡ, ಹಾವೇರಿ ಹಾಗೂ ಗದಗ ಕ್ಷೇತ್ರದ ನಮ್ಮ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದರು.
ಉತ್ತರಪ್ರದೇಶ, ಉತ್ತರಖಾಂಡದಲ್ಲಿ ನಮ್ಮ ಪರ ಅಲೆಯಿದೆ. ಪಂಜಾಬ್ ನಲ್ಲಿ ಹೊಸ ಪ್ರಯೋಗ ಮಾಡುತ್ತಿದ್ದೇವೆ. ಬಿಜೆಪಿ ಮತ್ತೊಮ್ಮೆ ಪಾರುಪತ್ಯ ಸಾಧಿಸಲಿದೆ ಎಂದರು.
ಪರಿಷತ್ ಚುನಾವಣೆಯಲ್ಲಿ ಹಣ ಹಂಚಿಕೆ ಕುರಿತು ಕೇಳಲಾದ ಪ್ರಶ್ನೆಗೆ 'ಇದರ ಬಗ್ಗೆ ಗಂಭೀರವಾದ ಚಿಂತನೆ ಅಗಬೇಕಿದೆ. ಹಣ ಹಂಚಿಕೆ ಇದೇ ರೀತಿ ಮುಂದುವರಿದರೆ ಪರಿಷತ್ ಅಗತ್ಯತೆ ಬಗ್ಗೆಯೇ ಚರ್ಚೆಯಾಗುತ್ತದೆ. ಎಲ್ಲ ಪಕ್ಷಗಳು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ ಎಂದರು.
ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗಿಂತ ಪರಿಷತ್ ಚುನಾವಣೆಯಲ್ಲಿ ಹೆಚ್ಚು ಹಣ ಖರ್ಚು ಅಗುತ್ತಿದೆ ಎನ್ನುವ ಸುದ್ದಿಯಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.