ಹುಬ್ಬಳ್ಳಿ: ರಾಜ್ಯದ ವಿಜಯಪುರ, ಬಳ್ಳಾರಿ, ಕಲಬುರ್ಗಿ ಹಾಗೂ ಮೈಸೂರು ಮಹಾನಗರಗಳ ಸಮಗ್ರ ಅಭಿವೃದ್ಧಿಗಾಗಿ ಸಾರ್ಟ್ ಸಿಟಿ ಯೋಜನೆ ಆಯ್ಕೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದರು.
ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆಯಾಗಿರುವ ಕಾಮಗಾರಿಗಳಿಗೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಹುಬ್ಬಳ್ಳಿ ಧಾರವಾಡದಲ್ಲಿ ನಾಲ್ಕು ದಿನಗಳಿಗೊಮ್ಮೆ ನೀರು ಸರಬರಾಜಾಗುತ್ತಿದೆ. ನಿತ್ಯ ನೀರು ಪೂರೈಕೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದರು.
ಕುಡಿಯುವ ನೀರು ಹಾಗೂ ಒಳಚರಂಡಿ ಕಾಮಗಾರಿಗಾಗಿ ₹492 ಕೋಟಿ ಪ್ರಸ್ತಾವವನ್ನು ಅಧಿಕಾರಿಗಳು ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ, ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಪಾಲಿಕೆಗಳಲ್ಲಿ ಎಲ್ಇಡಿ ಬೀದಿ ದೀಪ ಅಳವಡಿಸಲಾಗುವುದು. ಹುಬ್ಬಳ್ಳಿ ಯಲ್ಲಿ ₹64 ಕೋಟಿ ವೆಚ್ಚದಲ್ಲಿ ಟೆಂಡರ್ ಆಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.