ADVERTISEMENT

ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದ: ಸಮರ್ಥ ಕಾನೂನು ತಜ್ಞರ ತಂಡ ನೇಮಕ– ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2022, 12:39 IST
Last Updated 4 ಸೆಪ್ಟೆಂಬರ್ 2022, 12:39 IST
   

ಹುಬ್ಬಳ್ಳಿ: 'ಸುಪ್ರೀಂಕೋರ್ಟ್'ನಲ್ಲಿ ನ. 23ರಂದು ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಷಯ ವಿಚಾರಣೆಗೆ ಬರಲಿದ್ದು, ರಾಜ್ಯದ ಪರವಾಗಿ ವಾದ ಮಂಡಿಸಲು ಸಮರ್ಥ ಕಾನೂನು ತಜ್ಞರ ತಂಡ ನೇಮಕ ಮಾಡಲು ಅಡ್ವಕೇಟ್ ಜನರಲ್ ಅವರಿಗೆ ಸೂಚಿಸಲಾಗಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಭಾನುವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, 'ಗಡಿವಿವಾದದ ವಿಷಯ ಕುರಿತು ಈಗಾಗಲೇ ಅಡ್ವಕೇಟ್ ಜನರಲ್ ಅವರನ್ನು ಸಂಪರ್ಕಿಸಿ, ಅಗತ್ಯ ಸಲಹೆ ಸೂಚನೆ ನೀಡಲಾಗಿದೆ. ಆ ಕುರಿತು ಸಾಕಷ್ಟು ಅಧ್ಯಯನ ಸಹ ನಡೆಸಲಾಗಿದೆ. ವಾದ ಮಂಡಿಸಲು ನುರಿತ ಅತ್ಯಂತ ಹಿರಿಯ ವಕೀಲರನ್ನು ನಿಯೋಜಿಸಬೇಕು ಎಂದು ನಿರ್ದೇಶಿಸಲಾಗಿದೆ. ಸರ್ಕಾರ ಈ ಕುರಿತು ನಿರ್ಲಕ್ಷ್ಯವಹಿಸಿಲ್ಲ. ಸಮರ್ಥವಾಗಿ ವಾದ ಮಂಡಿಸಲಿದೆ' ಎಂದು ಹೇಳಿದರು.

'ಪ್ರಸಕ್ತ ಸಾಲಿನ ಸಿಇಟಿ ರ್ಯಾಂಕಿಂಗ್ ಸಂಬಂಧಿಸಿ ಹೈಕೋರ್ಟ್ ಆದೇಶ ನೀಡಿದ್ದು, ಕೆಲವು ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎನ್ನುವ ಮಾತು ಕೇಳಿ ಬಂದಿದೆ. ಕೋರ್ಟ್ ಆದೇಶ ಅಧ್ಯಯನ ಮಾಡಿ ವರದಿ ಸಲ್ಲಿಸಲು ಅಡ್ವಕೇಟ್ ಜನರಲ್'ಗೆ ಸೂಚಿಸಲಾಗಿದೆ. ಮೇಲ್ಮನವಿ ಸಲ್ಲಿಸುವ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುವುದು' ಎಂದರು.

ADVERTISEMENT

'ಪೊಲೀಸ್ ಸಿಬ್ಬಂದಿಗೆ ಸಂಬಂಧಿಸಿದ ಅವರಾದ್ಕರ್ ವರದಿ ಅನುಷ್ಠಾನಗೊಳ್ಳುತ್ತಿದೆ. ಪೊಲೀಸ್ ಇಲಾಖೆ ಸಿಬ್ಬಂದಿಯೂ ಹೆಚ್ಚಿನ ಕೌಶಲ ಪಡೆಯಬೇಕೆಂದು, ಕಂಪ್ಯೂಟರ್ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಎಲ್ಲ ಇಲಾಖೆಯ ಸಿಬ್ಬಂದಿಗೂ ಇದು ಕಡ್ಡಾಯವಾಗಿದೆ. ಸಾರ್ವಜನಿಕ ಹಿತಾಸಕ್ತಿಗಾಗಿ ಜಾರಿ ಮಾಡಲಾಗಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.